ರಾಯಚೂರು: ‘ಪ್ರತಿಯೊಬ್ಬರೂ ಕಾನೂನು ಜ್ಞಾನ ಪಡೆದುಕೊಳ್ಳುವುದು ಅವಶ್ಯ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಜೀವಿಸುವ ಹಕ್ಕಿದೆ. ಕಾನೂನು ಅರಿವು ಇದ್ದಲ್ಲಿ ಹಕ್ಕುಗಳನ್ನು ಪಡೆಯಲು ಸಾಧ್ಯ’ ಎಂದು ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಜನ್ ಆರ್ಯನ್ ಹೇಳಿದರು.
ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ ಹಾಗೂ ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಸಹಯೋಗದಲ್ಲಿ ನಡೆದ ಕಾನೂನು ಅರಿವು ಹಾಗೂ ಲೋಕ ಅದಾಲತ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅವಶ್ಯಕ. ಹುಟ್ಟಿನಿಂದ ಸಾಯುವವರೆಗೆ ಜೀವಿಸಲು ಬೇಕಾಗುವ ಹಕ್ಕುಗಳನ್ನು ಒದಗಿಸುವುದು ನ್ಯಾಯಾಲಯದ ಜವಾಬ್ದಾರಿ. ನಾಗರಿಕರ ಹಕ್ಕುಗಳನ್ನು ಪಡೆಯಲು ಕಾನೂನಿನ ಅರಿವು ಮುಖ್ಯವಾಗಿದೆ. ಆ. 14 ರಂದು ನಡೆಯುವ ಲೋಕ ಅದಾಲತ್ನಲ್ಲಿ ತಮ್ಮ ಪ್ರಕರಣಗಳಲ್ಲಿ ತಾವೇ ವಾದಿಸಿ ರಾಜಿ ಸಂಧಾನದ ಮೂಲಕ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಹೇಳಿದರು. ಕುಟುಂಬ, ಬ್ಯಾಂಕ್, ಸಿವಿಲ್, ಅಪಘಾತ ಸೇರಿದಂತೆ ಮತ್ತಿತರ ಪ್ರಕರಣಗಳ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಲೋಕ ಅದಾಲತ್ ನಲ್ಲಿ ಭಾಗವಹಿಸಬೇಕು ಎಂದರು.
ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಾಗ ರಾಜಿ ಮಾಡಿಸಬಹುದು. ಇದರಿಂದ ತಮ್ಮ ಪ್ರಕರಣವನ್ನು ಶೀಘ್ರ ಬಗೆ ಹರಿಸಿಕೊಳ್ಳಬಹುದಾಗಿದೆ. ಲೋಕ ಅದಾಲತ್ ಮೂಲಕ ಕಡಿಮೆ ಖರ್ಚಿನಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು. ಗ್ರಾಮೀಣ ಭಾಗದ ಜನರಲ್ಲಿ ಕಾನೂನಿನ ಬಗ್ಗೆ ಅರಿವು ಇರುವುದಿಲ್ಲ. ಅವರಿಗೆ ಕಾನೂನು ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಡಾ. ಮೋಹನ್ ರಾವ್ ನಲ್ವಡೆ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರ್.ಎಸ್, ಕಾರ್ಯದರ್ಶಿ ರಾಜು.ಎಸ್ ಹಾಗೂ ಜಗನ್ನಾಥ ಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.