ADVERTISEMENT

ಸ್ವಾತಂತ್ರ್ಯವು ಸಂವಿಧಾನ ನೀಡಿರುವ ಅದ್ಭುತ ಕೊಡುಗೆ: ನ್ಯಾಯಾಧೀಶ ಮಹಾವರಕರ್

ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಗಾರದಲ್ಲಿ ನ್ಯಾಯಾಧೀಶ ಮಹಾವರಕರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 6:03 IST
Last Updated 18 ಫೆಬ್ರುವರಿ 2026, 6:03 IST
ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ನಾಲ್ಕು ದಿನಗಳ ತರಬೇತಿ ಕಾರ್ಯಾಗಾರವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಹಾವರಕರ್ ಗುಲ್ಜರಲಾಲ್ ಉದ್ಘಾಟಿಸಿದರು. ಡಾ.ಸುರೇಂದ್ರ ಬಾಬು, ಎಚ್.ಎ.ಸಾತ್ವಿಕ್, ಶ್ರೀಕಾಂತ ಎಸ್.ವಿ. ಉಪಸ್ಥಿತರಿದ್ದರು
ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ನಾಲ್ಕು ದಿನಗಳ ತರಬೇತಿ ಕಾರ್ಯಾಗಾರವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಹಾವರಕರ್ ಗುಲ್ಜರಲಾಲ್ ಉದ್ಘಾಟಿಸಿದರು. ಡಾ.ಸುರೇಂದ್ರ ಬಾಬು, ಎಚ್.ಎ.ಸಾತ್ವಿಕ್, ಶ್ರೀಕಾಂತ ಎಸ್.ವಿ. ಉಪಸ್ಥಿತರಿದ್ದರು   

ರಾಯಚೂರು: ‘ಸ್ವಾತಂತ್ರ್ಯವು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸಂವಿಧಾನ ನೀಡಿರುವ ಅದ್ಭುತ ಕೊಡುಗೆಯಾಗಿದೆ’ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಹಾವರಕರ ಗುಲ್ಜರಲಾಲ್ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ನಾಲ್ಕು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿಯೊಬ್ಬ ಭಾರತೀಯ ತಮ್ಮ ಮೂಲಭೂತ ಹಕ್ಕುಗಳನ್ನು ಪಡೆಯಬೇಕು ಎನ್ನುವುದು ಸಂವಿಧಾನದ ಆಶಯವಾಗಿದೆ. ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ಸರ್ಕಾರದ ಸವಲತ್ತು ಮುಟ್ಟಿಸುವ ಕೆಲಸವನ್ನು ಅರೆಕಾಲಿಕ ಸೇವಾ ಸ್ವಯಂ ಸೇವಕರು ಮಾಡಬೇಕು’ ಎಂದು ಹೇಳಿದರು.

ADVERTISEMENT

‘ಸ್ವಾತಂತ್ರ್ಯದೊಂದಿಗೆ ವ್ಯಕ್ತಿಗೆ ಸಿಗಬೇಕಾದ ಸೌಲಭ್ಯ, ಮಾಹಿತಿ, ಸೇವೆಗಳನ್ನು ನೀಡಲು ನಿಯಮಿತ ಜವಾಬ್ದಾರಿ ವಹಿಸಲಾಗಿದೆ. ಇದನ್ನು ಒದಗಿಸಲು ಹಲವಾರು ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಆದರೂ ಸಹ ಕೆಲವರಿಗೆ ಕಾನೂನು ಅರಿವಿನ ಕೊರತೆಯಿಂದ ಸೌಲಭ್ಯ, ಸೇವೆ ಪಡೆಯಲು ಆಗುತ್ತಿಲ್ಲ’ ಎಂದು ತಿಳಿಸಿದರು.

‘ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಿಗಬೇಕಾದ ಸಾಮಾನ್ಯ ಕಾನೂನಿನ ಜ್ಞಾನವನ್ನು ಒದಗಿಸಿ, ಆತನನ್ನು ಸಮಸ್ಯೆಗಳಿಂದ ಪಾರು ಮಾಡುವ ಗುರುತರ ಜವಾಬ್ದಾರಿಯನ್ನು ಸ್ವಯಂ ಸೇವಕರು ತೆಗೆದುಕೊಳ್ಳಬೇಕು. ಸಮಾಜ ಸೇವೆ ಮಾಡುವ ಮನಸ್ಥಿತಿಯುಳ್ಳವರು ಮುಂದೆ ಬಂದಿರುವುದು ಶ್ಲಾಘನೀಯವಾಗಿದೆ’ ಎಂದು ಹೇಳಿದರು.

ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎ.ಸಾತ್ವಿಕ್ ಮಾತನಾಡಿ, ‘ಸಾರ್ವಜನಿಕರಿಗೆ ಕಾನೂನುಗಳ ಸಲಹೆಗಳನ್ನು ಉಚಿತವಾಗಿ ನೀಡುವುದು ಈ ತರಬೇತಿಯ ಉದ್ದೇಶವಾಗಿದೆ’ ಎಂದು ತಿಳಿಸಿದರು.

‘ಕೆಲವೊಂದು ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಹೇಗೆ ಪಡೆದುಕೊಳ್ಳಬೇಕು ಎನ್ನುವುದು ಸಹ ಸಾರ್ವಜನಿಕರಿಗೆ ಮಾಹಿತಿ ಇರುವುದಿಲ್ಲ. ಅಂತವರಿಗೆ ಸರಿಯಾದ ಮಾಹಿತಿ ಸಲಹೆಗಳನ್ನು ಅರೆಕಾಲಿಕ ಸೇವಾ ಸ್ವಯಂ ಸೇವಕರು ನೀಡಿ, ಸರ್ಕಾರದ ವಿವಿಧ ಸೌಲಭ್ಯವನ್ನು ಒದಗಿಸಲು ನೆರವಾಗಬೇಕು‘ ಎಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು ಮಾತನಾಡಿ, ‘ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಬೇಕಾಗುವ ಅಗತ್ಯ ನೆರವನ್ನು ಆರೋಗ್ಯ ಇಲಾಖೆಯಿಂದ ನೀಡಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೂ ಕಾನೂನು ಅರಿವು ಮೂಡಿಸಲಾಗುತ್ತಿದೆ’ ಎಂದರು.

ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಶ್ರೀಕಾಂತ ಎಸ್.ವಿ., ಬೆಂಗಳೂರಿನ ಔಟ್ ಲಾಡ್ ಇಂಡಿಯಾ ಸಂಸ್ಥೆಯ ವೆಂಕಟೇಶ ಎಚ್., ಜೋಮಿ ಜಾಯ್ ಉಪಸ್ಥಿತರಿದ್ದರು. ವಕೀಲೆ ಮಾಲತಿ ನಿರೂಪಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪನವ ಸ್ವಾಗತಿಸಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ವಂದಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರಿನ ಔಟ್ ಲಾಡ್ ಇಂಡಿಯಾ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಾಗಾರ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.