ದೇವಸೂಗೂರು (ಶಕ್ತಿನಗರ): ದೇವಸೂಗೂರು ಗ್ರಾಮದಲ್ಲಿ ಸ್ಥಳ ಗುರುತಿಸಿ ಕಲ್ಯಾಣ ಮಂಟಪದ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇವಸೂಗೂರು ಗ್ರಾಮದಲ್ಲಿ ಕಲ್ಯಾಣ ಮಂಟಪದ ಕಾಮಗಾರಿ ಕೈಗೊಳ್ಳಲು ಸೋಮವಾರ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರು ಸ್ಥಳ ಪರಿಶೀಲಿಸಿ ನಂತರ, ಹಿಂದೂ ಧಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸೂಗೂರೇಶ್ವರ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ವಿವಾಹಗಳಿಗೆ ನೂತನ ಕಲ್ಯಾಣ ಮಂಟಪ ವೇದಿಕೆ ಅನುಕೂಲವಾಗಲಿದೆ ಎಂದರು.
ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಬೇಕೆಂದು ಸೂಗೂರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹಂಪನಗೌಡ ಪೊಲೀಸ್ ಪಾಟೀಲ್, ಕಾರ್ಯನಿರ್ವಾಹಕಾಧಿಕಾರಿ ಪಿ.ಶಾಂತಮ್ಮ ಮತ್ತು ಸಮಿತಿಯ ಸರ್ವ ಸದಸ್ಯರು, ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಸೂಗೂರೇಶ್ವರ ದೇವಸ್ಥಾನದಿಂದ ಕೃಷ್ಣಾನದಿಗೆ ತೆರಳುವ ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಆರ್ಟಿಪಿಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕ್ರಪ್ಪ ಸಾಹುಕಾರ್, ಜಿಲ್ಲಾ ಉಪವಿಭಾಗಧಿಕಾರಿ ಸಂತೋಷಕುಮಾರ ಕಾಮಗೌಡ, ದೇವಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೂಗನಗೌಡ, ಪಿಡಿಒ ರವಿಕುಮಾರ, ಮುಖಂಡರಾದ ಪಿ.ಶ್ರೀನಿವಾಸರೆಡ್ಡಿ, ಅಚ್ಯುತ್ರೆಡ್ಡಿ, ದೇವಸೂಗೂರು ಹೋಬಳಿ ನಾಡ ಕಚೇರಿಯ ಉಪ ತಹಶೀಲ್ದಾರ್ ಮಹೇಶ, ಕಂದಾಯ ನಿರೀಕ್ಷಕ ಭೂಪತಿ, ಗ್ರಾಮಲೆಕ್ಕಾಧಿಕಾರಿ ಸುರೇಶ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.