ADVERTISEMENT

ರಾಯಚೂರಿನಲ್ಲಿ ಇಂದಿನಿಂದ ಮೂರುದಿನ ಲಾಕ್‌ಡೌನ್‌ ಬಿಗಿ

ಕಿರಾಣಿ, ತರಕಾರಿ ಮಾರಾಟ ಯಾವುದಕ್ಕೂ ಅವಕಾಶವಿಲ್ಲ

​ಪ್ರಜಾವಾಣಿ ವಾರ್ತೆ
Published 15 ಮೇ 2021, 13:42 IST
Last Updated 15 ಮೇ 2021, 13:42 IST
ಆರ್‌.ವೆಂಕಟೇಶಕುಮಾರ್‌
ಆರ್‌.ವೆಂಕಟೇಶಕುಮಾರ್‌   

ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕಣಗಳು ನಾಲ್ಕು ಅಂಕಿಗಳಲ್ಲಿ ಪತ್ತೆ ಆಗುತ್ತಿರುವುದರಿಂದ ಜನ ಸಂಚಾರ ನಿಯಂತ್ರಿಸುವುದಕ್ಕಾಗಿ ಭಾನುವಾರದಿಂದ ಮೂರು ದಿನಗಳವರೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಆದೇಶ ಹೊರಡಿಸಿದ್ದಾರೆ.

’ವಿಪತ್ತು ನಿರ್ವಹಣೆ ಕಾಯ್ದೆ–2005 ಕಲಂ 34 (ಎಂ)’ ಅಡಿಯಲ್ಲಿ ಪ್ರದತ್ತ ಅಧಿಕಾರ ಚಲಾಯಿಸಿ ಆದೇಶ ಹೊರಡಿಸಲಾಗಿದ್ದು, ಕೋವಿಡ್‌ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಅಗತ್ಯವಿರುವ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅಗತ್ಯ ವಸ್ತುಗಳಾದ ಹಾಲು, ಆಸ್ಪತ್ರೆಗಳು, ಔಷಧಿ ಅಂಗಡಿಗಳು, ಆ್ಯಂಬುಲನ್ಸ್‌ಗಳ ಓಡಾಟ, ಪೆಟ್ರೊಲ್‌ ಬಂಕ್‌ ಹಾಗೂ ಅಗ್ನಿಶಾಮಕ ವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಮೇ 16 ರ ಬೆಳಿಗ್ಗೆ 6 ರಿಂದ 19ನೇ ಬೆಳಿಗ್ಗೆ 6 ರವರೆಗೂ ಆದೇಶ ಜಾರಿಯಲ್ಲಿರುತ್ತದೆ. ಮೇ 19 ರಂದು ಬೆಳಿಗ್ಗೆ 6 ರಿಂದ 10 ಗಂಟೆವರೆಗೂ ಎಂದಿನಂತೆ ಭಾಗಶಃ ಲಾಕ್‌ಡೌನ್‌ ಇರುತ್ತದೆ. ಅಂದು ಕಿರಾಣಿ ದಿನಸಿ ಅಂಗಡಿಗಳು, ತರಕಾರಿ, ಹಣ್ಣು–ಹೂವು ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ.

ADVERTISEMENT

ಆಸ್ಪತ್ರೆಗಳಿಗೆ ಹೋಗುವವರು ವೈದ್ಯಕೀಯ ದಾಖಲೆಗಳನ್ನು ಚೆಕ್‌ಪೋಸ್ಟ್‌ಗಳಲ್ಲಿ ತೋರಿಸಬೇಕು. ದಿನಪ್ರತಿಕೆಗಳು, ಎಂಟಿಎಂ ಸೇವೆಗಳು ಅನುಮತಿಸಲಾಗಿದೆ. ಆಹಾರ ಸಂಸ್ಕರಣೆಯ ಸೇವೆಗಳಾದ ಕೋಲ್ಡ್ ಸ್ಟೋರೇಜ್‌ಗಳು, ಔಷಧ ಉದ್ಯಮಗಳು, ರಾಸಾಯನಿಕ ಉದ್ಯಮಗಳು, ವಿದ್ಯುತ್ ಉತ್ಪಾದನೆ ಮತ್ತು ಪ್ರಸರಣ ಘಟಕಗಳು, ಆರ್‌ಟಿಪಿಎಸ್ ಮತ್ತು ವೈಟಿಪಿಎಸ್‌ಗಳಲ್ಲಿ ಶೇ 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ.

ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ ವಾಹನಗಳಿಗೆ ಅನುಮತಿಸಲಾಗಿದೆ. ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ, ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ, ನಾಗರಿಕ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ವಿಪತ್ತು ನಿರ್ವಹಣೆ, ಕಾರಾಗೃಹ ಸೇವೆಗಳಿಗೆ ಯಾವುದೇ ನಿರ್ಬಂಧವಿರುವುದಿಲ್ಲ. ಕೋವಿಡ್-19ಗೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಚೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅನುಮತಿ ಇದೆ.

ನ್ಯಾಯಾಲಯಗಳು ಹಾಗೂ ನ್ಯಾಯಾಂಗ ಕೆಲಸಗಳಿಗೆ ಸಂಬಂಧಿಸಿದ ಕಚೇರಿಗಳು, ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುವುದು. ಸಂಬಂಧಪಟ್ಟ ಇಲಾಖೆಗಳನ್ನು ಹೊರತುಪಡಿಸಿ, ಉಳಿದ ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆಯಿಂದಲೇ ಕೆಲಸ ನಿರ್ವಹಿಸುವುದು. ಮರಣ, ಅಂತ್ಯಕ್ರಿಯೆ, ಶವಸಂಸ್ಕಾರಕ್ಕೆ 5 ಜನರಿಗೆ ಮಾತ್ರ ಅನುಮತಿಸಲಾಗಿದೆ.

ಮದುವೆಗಳಿಗೆ ಸಂಬಂಧಪಟ್ಟ ತಹಶೀಲ್ದಾರ್‌ಗಳ ಅನುಮತಿಯೊಂದಿಗೆ 10 ಜನರಿಗೆ ಮಾತ್ರ ಮನೆಯ ಒಳಗಡೆ ನಡೆಸಬೇಕು. ಆಸ್ಪತ್ರೆಗಳ ಒಳ ಹಾಗೂ ಹೊರ ರೋಗಿಗಳಿಗೆ ಉಪಹಾರ, ಊಟದ ವ್ಯವಸ್ಥೆಯನ್ನು ಕಲ್ಪಿಸುವುದು ಸಂಬಂಧಪಟ್ಟ ಆಸ್ಪತ್ರೆಗಳ ಜವಾಬ್ದಾರಿಯಾಗಿರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.