ADVERTISEMENT

ರಾಯಚೂರು: ಮಧ್ಯಾಹ್ನ 2 ಗಂಟೆವರೆಗೂ ಖರೀದಿಗೆ ಅವಕಾಶ ಇಂದು

ಸಂಪೂರ್ಣ ಲಾಕ್‌ಡೌನ್‌ ಮೇ 30 ರವರೆಗೂ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 26 ಮೇ 2021, 14:51 IST
Last Updated 26 ಮೇ 2021, 14:51 IST
ಆರ್‌.ವೆಂಕಟೇಶಕುಮಾರ್‌
ಆರ್‌.ವೆಂಕಟೇಶಕುಮಾರ್‌   

ರಾಯಚೂರು: ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಅದರ ನಿಯಂತ್ರಣಕ್ಕಾಗಿ ಮೇ 30 ವರೆಗೂ ಸಂಪೂರ್ಣ ಲಾಕ್‌ಡೌನ್‌ ಮುಂದುವರಿಯಲಿದೆ. ಆದರೆ ಮೇ 27 ರಂದು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ವರೆಗೂ ದಿನಸಿ ಮತ್ತು ತರಕಾರಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಅಗತ್ಯ ವಸ್ತುಗಳಾದ ನೀರು, ಹಾಲು, ಹಣ್ಣು, ಕಿರಾಣಿ ಅಂಗಡಿ, ತರಕಾರಿ, ಮಾಂಸ ಮಾರಾಟ ಮಾಡಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮದ್ಯದ ಅಂಗಡಿಗಳಲ್ಲಿ ಮದ್ಯವನ್ನು ಪಾರ್ಸಲ್ ತೆಗೆದುಕೊಂಡು ಹೋಗಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಬ್ಯಾಂಕುಗಳು ಪ್ರತಿದಿನ ಬೆಳಿಗ್ಗೆ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಕಾರ್ಯನಿರ್ವಾಹಿಸಲು ಮಾತ್ರ ಅನುಮತಿಸಲಾಗಿದೆ. ಆಹಾರ ಸಂಸ್ಕರಣೆಯ ಸೇವೆಗಳಾದ ಕೋಲ್ಡ್ ಸ್ಟೋರೇಜ್‌ಗಳು, ಔಷಧ ಉದ್ಯಮಗಳು, ರಾಸಾಯನಿಕ ಉದ್ಯಮಗಳು, ವಿದ್ಯುತ್ ಉತ್ಪಾದನೆ ಮತ್ತು ಪ್ರಸರಣ ಘಟಕಗಳು, ಆರ್‌ಟಿಪಿಎಸ್ ಮತ್ತು ವೈಟಿಪಿಎಸ್‌ಗಳಲ್ಲಿ ಶೇ 50ರಷ್ಟು ಸಿಬ್ಬಂದಿಯೊಂದಿಗೆ ನಿರ್ವಹಿಸಲು ಅನುಮತಿಸಲಾಗಿದೆ.

ADVERTISEMENT

ವೈದ್ಯಕೀಯ ಹಾಗೂ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯ ನಿಮಿತ್ತ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಮದುವೆಗಳನ್ನು ನಿರ್ಬಂಧಿಸಲಾಗಿದೆ.

ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮುಖಗವುಸನ್ನು ಧರಿಸುವುದು ಕಡ್ಡಾಯವಾಗಿದೆ. ಮುಖಗವಸನ್ನು ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ ₹250 ಮತ್ತು ಇನ್ನುಳಿದ ಪ್ರದೇಶಗಳಲ್ಲಿ ₹100 ದಂಡ ವಿಧಿಸಲಾಗುತ್ತದೆ. ಬೃಹತ್ ಸಾರ್ವಜನಿಕ ಸಭೆಗಳು, ಒಟ್ಟುಗೂಡುವಿಕೆ ನಿಷೇಧವನ್ನು ಮುಂದುವರೆಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಪಾನ್, ಗುಟ್ಕಾ, ತಂಬಾಕು ಇತ್ಯಾದಿಗಳ ಬಳಕೆಯನ್ನು ನಿಷೇಧಿಸಿದೆ.

ಕೋವಿಡ್-19 ನಿರ್ವಹಣೆಯ ಲಾಕ್‌ಡೌನ್ ಕ್ರಮಗಳನ್ನು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯು, ವಿಪತ್ತು ನಿರ್ವಹಣಾ ಅಧಿನಿಯಮ-2005ರ ಸೆಕ್ಷನ್ 51 ರಿಂದ 60 ರ ಉಪಬಂಧಗಳು, ಅಲ್ಲದೇ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.