ADVERTISEMENT

ಕೃಷಿ ಲಾಭದಾಯಕವಾಗಲು ಯಂತ್ರಗಳು ಸಹಕಾರಿ

ಕಪಾಸ್ ಪ್ಲಕ್ಕರ್ ಯಂತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿ ಎಂ.ಮಹೇಶ್ವರರಾವ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 14:13 IST
Last Updated 3 ಜನವರಿ 2019, 14:13 IST
ರಾಯಚೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ರೈತರಿಗೆ ಕಪಾಸ್ ಪ್ಲಕ್ಕರ್ ಹತ್ತಿ ಬಿಡಿಸುವ ಯಂತ್ರಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ರಾಜ್ಯ ಕಾರ್ಯದರ್ಶಿ ಎಂ.ಮಹೇಶ್ವರರಾವ್ ಮಾತನಾಡಿದರು
ರಾಯಚೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ರೈತರಿಗೆ ಕಪಾಸ್ ಪ್ಲಕ್ಕರ್ ಹತ್ತಿ ಬಿಡಿಸುವ ಯಂತ್ರಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ರಾಜ್ಯ ಕಾರ್ಯದರ್ಶಿ ಎಂ.ಮಹೇಶ್ವರರಾವ್ ಮಾತನಾಡಿದರು   

ರಾಯಚೂರು: ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಾಗೂ ಒಕ್ಕಲುತನದ ಖರ್ಚು ಕಡಿಮೆಗೊಳಿಸಿ ಕೃಷಿ ಲಾಭದಾಯಕವಾಗಲು ಯಂತ್ರಗಳು ಸಹಕಾರಿಯಾಗಿವೆ ಎಂದು ಕೃಷಿ ಇಲಾಖೆಯ ರಾಜ್ಯ ಕಾರ್ಯದರ್ಶಿ ಎಂ.ಮಹೇಶ್ವರರಾವ್ ಹೇಳಿದರು.

ನಗರದ ಪವನ್ ಮೆನಷನ್ ಹೋಟೆಲ್‌ನಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತ ಭಾರತ ಸರ್ಕಾರದ ಉಪಕ್ರಮ ವಸ್ತ್ರ ಮಂತ್ರಾಲಯ ಹುಬ್ಬಳ್ಳಿ ಶಾಖೆಯಿಂದ ಶುಕ್ರವಾರ ಆಯೋಜಿಸಿದ್ದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ರೈತರಿಗೆ ಕಪಾಸ್ ಪ್ಲಕ್ಕರ್ ಹತ್ತಿ ಬಿಡಿಸುವ ಯಂತ್ರಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದಲ್ಲಿ ಇತ್ತೀಚಿಗೆ ಕೃಷಿಯಲ್ಲಿ ಕೆಲಸ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಕೃಷಿ ಚಟುವಟಿಕೆಯ ಖರ್ಚು ಕೂಡ ಅಧಿಕವಾಗುತ್ತಿದೆ. ಕೃಷಿ ಕ್ಷೇತ್ರದ ಸಮಸ್ಯೆಗಳಿಂದ ಬಹಳಷ್ಟು ಜನರು ಕೃಷಿಯಿಂದ ವಿಮುಖರಾಗುತ್ತಿದ್ದು, ಬೇರೆ ಕ್ಷೇತ್ರಗಳಿಗೆ ಹೋಗುತ್ತಿದ್ದಾರೆ ಎಂದರು.

ADVERTISEMENT

ರೈತರು ಬೆಳೆದ ಬೆಳೆಗಳಿಗೆ ಒಳ್ಳೆಯ ಬೆಲೆ ದೊರಕಿಸಲು ಬೆಂಬಲ ಬೆಲೆ ಘೋಷಣೆ ಮಾಡಲಾಗಿದ್ದು, ಖರೀದಿ ಕೇಂದ್ರಗಳು ಆರಂಭಿಸಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಬೆಳೆದ ಬೆಳೆಯನ್ನು ಖರೀದಿ ಮಾಡಲು ಅವಕಾಶ ಒದಗಿಸಲಾಗುತ್ತದೆ ಎಂದು ತಿಳಿಸಿದರು.

ಮಳೆ ಅಭಾವದಿಂದ ಕಡಿಮೆ ಪ್ರಮಾಣದ ಇಳುವರಿ ಬರುವ ಸಾಧ್ಯತೆಯಿದೆ. ಆದರೂ, ಸಿಸಿಐ ಹತ್ತಿ ಖರೀದಿಗೆ ಮುಂದೆ ಬಂದಿದ್ದು, ಈಗಾಗಲೇ ಚರ್ಚೆ ನಡೆಸಲಾಗಿದೆ. ಹತ್ತಿ ಬೆಳೆಯುವ ಪ್ರದೇಶದಲ್ಲಿ ಹೆಚ್ಚಿನ ರೈತರಿಗೆ ಮಾಹಿತಿ ಕೊಡುವ ಕೆಲಸ ಮಾಡಲಾಗುತ್ತದೆ ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ರೈತರು ಪ್ರಮಾಣಿತವಾದ ಬೀಜಗಳನ್ನು ಖರೀದಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಗುಣಮಟ್ಟದ ಬೀಜ ಖರೀದಿಸಿದರೆ ಉತ್ತಮವಾದ ಫಸಲು ಬರಲಿದೆ ಎಂದು ಹೇಳಿದರು.

ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದಾಗಲೂ ಪ್ರಾಮಾಣಿತವಲ್ಲದ ಬೀಜಗಳನ್ನು ಖರೀದಿಸುವ ರೈತರು ಕೃಷಿ ಇಲಾಖೆಯ ಅಧಿಕಾರಿಗಳ ಬಳಿಗೆ ಬಂದರೆ ಏನೂ ಮಾಡಲಾಗಲ್ಲ. ಆದ್ದರಿಂದ ಪ್ರಾಮಾಣಿತವಾದ ಬೀಜಗಳನ್ನು ಖರೀದಿ ಮಾಡಬೇಕು ಎಂದರು.

ಸಿಸಿಐ ಅಧಿಕಾರಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.