ADVERTISEMENT

ಸಂಸದರಿಗೆ ಅಡ್ಡಿಪಡಿಸಿದವರನ್ನು ಗಡಿಪಾರು ಮಾಡಲು ಒತ್ತಾಯ

ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 5:19 IST
Last Updated 20 ಸೆಪ್ಟೆಂಬರ್ 2019, 5:19 IST
ರಾಯಚೂರಿನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮದೊಳಗೆ ಸಂಸದ ಎ.ನಾರಾಯಣಸ್ವಾಮಿ ಅವರು ಪ್ರವೇಶಿಸಲು ಅಡ್ಡಿಪಡಿಸಿರುವ ದುಷ್ಕರ್ಮಿಗಳನ್ನು ಗಡಿಪಾರು ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ಗುಡಿಸಲು ಮುಕ್ತ ರಾಜ್ಯದ ಆಶಯವನ್ನು ಈಡೇರಿಸಲು ಸಂಸದರು ಗ್ರಾಮಸ್ಥರೊಂದಿಗೆ ಮುಕ್ತವಾಗಿ ಚರ್ಚಿಸಲು ಹೋದಾಗ ಗ್ರಾಮದ ಕೆಲ ಕಿಡಿಗೇಡಿಗಳು ರಾಜಕೀಯ ಪ್ರೇರಿತವಾಗಿ ಗ್ರಾಮದೊಳಗೆ ಪ್ರವೇಶಿಸದಂತೆ ಅಡ್ಡಿಪಡಿಸಿರುವುದು ಕಾನೂನು ಬಾಹಿರವಾಗಿದೆ. ರಾಜಕೀಯವಾಗಿ ಉನ್ನತ ಶ್ರೇಣಿಯ ಹುದ್ದೆ ಹೊಂದಿರುವ ಸಂಸದರನ್ನು ದಲಿತರು ಎಂಬ ಕಾರಣಕ್ಕೆ ಕೊಳಕು ಮನಸ್ಸಿನ ಕೆಲ ಸವರ್ಣಿಯರು ಅಗೌರವದಿಂದ ಕಂಡಿರುವುದು ಅಪರಾಧವಾಗಿದೆ ಎಂದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೃತ್ಯವೆಸಗಿದ ದುಷ್ಕರ್ಮಿಗಳು ಯಾವುದೇ ಪಕ್ಷ ಅಥವಾ ಕೋಮಿನವರಾದರೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಬೇಕು. ಗೊಲ್ಲರಹಟ್ಟಿಯಲ್ಲಿ ಅಸ್ಪೃಶ್ಯತೆ ಜೀವಂತಾಗಿದ್ದು, ಅಲ್ಲಿರುವ ದಲಿತರೆಲ್ಲರೂ ಸಂಕಷ್ಟದ ಸುಳಿಯಲ್ಲಿದ್ದಾರೆ. ಗ್ರಾಮದಲ್ಲಿಭೀತಿಯ ವಾತಾವರಣ ಉಂಟಾಗಿರುವುದರಿಂದ ಜನರಲ್ಲಿ ಆತ್ಮವಿಶ್ವಾಸದ ಕೊರತೆ ಎದುರಾಗಿದೆ. ಕೂಡಲೇ ಇದನ್ನು ನೀಗಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಗುರುವಾರ ಮನವಿ ಸಲ್ಲಿಸಿದರು.

ADVERTISEMENT

ನಗರಸಭೆ ಸದಸ್ಯ ಎನ್.ಕೆ.ನಾಗರಾಜ, ಚಂದ್ರಶೇಖರ ಯಕ್ಲಾಸಪುರ, ಜನಾರ್ದನ ಹಳ್ಳಿಬೆಂಚಿ, ಎಸ್.ರಾಜು, ಕೆ.ಪಿ.ಅನಿಲಕುಮಾರ, ಆರ್.ಆಂಜನೇಯ, ರೆಡ್ಡಪ್ಪ, ಎಸ್.ಹುಲಿಗೆಪ್ಪ, ಚಂದ್ರು ಭಂಡಾರಿ, ಎಸ್.ವೆಂಕಟೇಶ, ಭೀಮಣ್ಣ, ವೆಂಕಟೇಶ, ಬಸವರಾಜ, ನರಸಿಂಹಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.