ADVERTISEMENT

ಮಡಿವಾಳ ಮಾಚಿದೇವರು ಮಾನವ ಕುಲದ ಆಸ್ತಿ :ಶಾಸಕ ಬಸನಗೌಡ ದದ್ದಲ

ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2020, 13:51 IST
Last Updated 1 ಫೆಬ್ರುವರಿ 2020, 13:51 IST
ರಾಯಚೂರಿನಲ್ಲಿ ಶನಿವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಡಿವಾಳ ಸಮಾಜದ ಸಾಧಕರನ್ನು ಗಣ್ಯರು ಸನ್ಮಾನಿಸಿದರು
ರಾಯಚೂರಿನಲ್ಲಿ ಶನಿವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಡಿವಾಳ ಸಮಾಜದ ಸಾಧಕರನ್ನು ಗಣ್ಯರು ಸನ್ಮಾನಿಸಿದರು   

ರಾಯಚೂರು: ಮಡಿವಾಳ ಮಾಚಿದೇವರು ಮಾನವ ಕುಲದ ಆಸ್ತಿಯಾಗಿದ್ದು, ಅವರ ವಚನ ಮತ್ತು ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಸನಗೌಡ ದದ್ದಲ್ ಹೇಳಿದರು.

ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶನಿವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದ ಸುಧಾರಕರಾದ ಮಡಿವಾಳ ಮಾಚಿದೇವರು ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದಲು ಪ್ರಯತ್ನಿಸಿದ್ದರು. ಸಮಸ್ಯೆಗಳಿಗೆ ಹೆದರದೇ ಮುನ್ನುಗ್ಗಿ ಜನರ ಮನಸ್ಸಿನಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ್ದರು. ಬಸವಣ್ಣನವರ ಅನುಭವ ಮಂಟಪದಲ್ಲಿ ಸಾಮಾಜಿಕ ಸಮಾನತೆಯ ತತ್ವ ಸಂದೇಶಗಳನ್ನು ಸಾರಿದ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ. ಅವರ ವಚನಗಳು ಇಂದಿಗೂ ಪ್ರಸ್ತುತ ಎಂದು ತಿಳಿಸಿದರು.

ADVERTISEMENT

ಶರಣರ ಮಾರ್ಗದರ್ಶನದಲ್ಲಿ ನಡೆಯಬೇಕಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದಾಗ ಮಾತ್ರ ಒಂದು ಸಮಾಜ ಬಲಿಷ್ಠವಾಗಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಗೆ ಸೌಲಭ್ಯಗಳು ಸಿಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಬೇಕು. ಇಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಈ ಜಯಂತಿ ಆಚರಿಸಿರುವುದಕ್ಕೆ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ.ಎಸ್. ಶಿವರಾಜ್ ಪಾಟೀಲ ಮಾತನಾಡಿ, ಮಡಿವಾಳ ಮಾಚಿದೇವ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿರುವುದು ಸಂತಸದಾಯಕವಾಗಿದೆ. ಶರಣರು ಬಸವಣ್ಣನವರ ಅನುಭವ ಮಂಟಪದಲ್ಲಿ ಒಬ್ಬ ರಾಜನಾಗಿ, ಸೈನಿಕನಾಗಿ ವಚನಗಳನ್ನು ಕಾಪಾಡಿಕೊಂಡು ಮುಂದಿನ ಪೀಳಿಗೆಗೆ ನೀಡುವಲ್ಲಿ ಮಾಚಿದೇವರು ಮಹತ್ತರವಾದ ಪಾತ್ರವಹಿಸಿದ್ದಾರೆ ಎಂದರು.

ಸಮಾಜ ಅಭಿವೃದ್ಧಿಯಾಗಲು ಶಿಕ್ಷಣ ಮುಖ್ಯವಾದ ಆಯುಧವಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಉನ್ನತ ಶಿಕ್ಷಣ ಪಡೆಯಬೇಕು. ಐಎಎಸ್, ಕೆಎಎಸ್ ಅಧಿಕಾರಿಗಳಾಗಿ ಸಮಾಜದ ಪ್ರಗತಿಗೆ ಕಾರಣಿಕರ್ತರಾಗಬೇಕು ಎಂದು ಸಲಹೆ ನೀಡಿದರು.

ಮಡಿವಾಳ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಜಿ. ಸುರೇಶ ಮಾತನಾಡಿ, ಮಡಿವಾಳ ಜನಾಂಗಕ್ಕೆ ರುದ್ರಭೂಮಿಯನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು. .

ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಡಿವಾಳ ಸಮಾಜದವರಿಗೆ ಗೌರವಿಸಲಾಯಿತು.

ಝಂಜಿರಮಠದ ಬಸವ ಕುಟೀರ ಪಾವನ ಕ್ಷೇತ್ರದ ಶರಣ ಬಸವರಾಜೇಂದ್ರ ಶರಣರು ಮಡಿವಾಳ ಮಾಚಿದೇವರ ಬಗ್ಗೆ ಉಪನ್ಯಾಸ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್, ನಗರಸಭೆ ಸದಸ್ಯರಾದ ವಿ.ನಾಗರಾಜ್, ಆಂಜಿನೇಯ, ರವೀಂದ್ರ ಜಲ್ದಾರ್, ಎಂ.ಕೆ.ನಾಗರಾಜ್, ಸಮಾಜದ ಮುಖಂಡರಾದ ಜಂಬಣ್ಣ, ಪಿ.ಧರ್ಮೇಂದ್ರ, ಟಿ.ಮಲ್ಲೇಶ, ಶಿವಶಂಕರ್, ಮಹಿಳಾ ಘಟಕದ ಪ್ರಮುಖರಾದ ಮಂಜುಳ, ಜಮುನಾ, ಉಮಾ ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳ ವಿ. ನಾಯಕ್ ಸ್ವಾಗತಿಸಿದರು. ದಂಡಪ್ಪ ಬಿರಾದರ್ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.