ಮಸ್ಕಿ: ‘ಡಾ. ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಹಕ್ಕುಗಳನ್ನು ಸಾಮಾಜಿಕ ನ್ಯಾಯದ ಅಡಿಯ ಮೇಲೆ ನಾಡಿನ ಮಠ ಮಾನ್ಯಗಳು, ಮಠಾಧೀಶರು ಜಾರಿಗೆ ತರುವ ಮೂಲಕ ಸಂವಿಧಾನದ ಆಶಯವನ್ನು ಎತ್ತಿ ಹಿಡಿದಿವೆ‘ ಎಂದು ಸಂಸದ ಕರಡಿ ಸಂಗಣ್ಣ ಹೇಳಿದರು.
ತಾಲ್ಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ಬುಧವಾರ ನಡೆದ ಮಹಾಂತಿಮಠದ ಮಹಾಂತದೇವರ ಶ್ರೀಗುರು ಪಟ್ಟಾಧಿಕಾರಿ ಮಹೋತ್ಸವ ನಿಮಿತ್ತ ನಡೆದ ಧರ್ಮಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಈ ನಾಡಿನಲ್ಲಿ ನೂರಾರು ಮಠಗಳು, ಅಕ್ಷರ, ಜ್ಞಾನ ಹಾಗೂ ಆಧ್ಯಾತ್ಮಿಕ ದಾಸೋಹಗಳನ್ನು ನಡೆಸುವ ಮೂಲಕ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿವೆ‘ ಎಂದರು.
‘ಪ್ರತಾಪಗೌಡ ಪಾಟೀಲ್ ಜೊತೆ ಸೇರಿ ಈ ಭಾಗದ ನೀರಾವರಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು‘ ಎಂದರು.
ರಂಬಾಪೂರಿ ಪೀಠದ ಜಗದ್ಗುರು ರೇಣುಕಾ ಡಾ.ವೀರಸೋಮೇಶ್ವರ ದೇಶಿಕೇಂದ್ರ ಶಿವಾಚಾರ್ಯರು ಸಾನ್ನಿದ್ಯ ವಹಿಸಿದ್ದರು. ಮಹಾಂತಿನಮಠದ ನೂತನ ಪೀಠಾಧ್ಯಕ್ಷ ಮಹಾಂತ ಶಿವಾಚಾರ್ಯ ಸ್ವಾಮೀಜಿ, ನಂದವಾಡಗಿಯ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಘನಮಠೇಶ್ವರ ಮಠದ ಗುರುಬಸವ ಸ್ವಾಮೀಜಿ, ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಗಚ್ಚಿನಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಡಾ. ಕೇದಾರಲಿಂಗ ಶಿವಾಚಾರ್ಯ ಸ್ವಾಮೀಜಿ, ಸದಾನಂದ ಸ್ವಾಮೀಜಿ, ಗುಳೆದಗುಡ್ಡದ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ಗಜದಂಡ ಶಿವಾಚಾರ್ಯ ಸ್ವಾಮೀಜಿ, ಕರಿಬಸವ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು ಪಾಲ್ಗೊಂಡಿದ್ದರು.
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಕೃಷಿ ಆಯೋಗದ ಅಧ್ಯಕ್ಷ ಹನುಮನಗೌಡ ಬೇಳಗುರ್ಕಿ ಸೇರಿದಂತೆ ಅನೇಕ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಿದ್ದರು.
ಪಟ್ಟಾಧಿಕಾರ ಮಹೋತ್ಸವ ನಿಮಿತ್ತ ಜಂಗಮ ವಟುಗಳ ಅಯ್ಯಾಚಾರ ಹಾಗೂ ಸಾಮೂಹಿಕ ವಿವಾಹಗಳು ನಡೆದವು.
ಸಂಭ್ರಮದ ಸ್ವಾಗತ: ಪಟ್ಟಾಧಿಕಾರ ಮಹೋತ್ಸವ ನಿಮಿತ್ತ ಸಂತೆಕೆಲ್ಲೂರು ಗ್ರಾಮಕ್ಕೆ ಆಗಮಿಸಿದ ರಂಬಾಪೂರಿ ಪೀಠದ ಜಗದ್ಗುರು ರೇಣುಕಾ ಡಾ. ವೀರಸೋಮೇಶ್ವರ ದೇಶಿಕೇಂದ್ರ ಶಿವಾಚಾರ್ಯರನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.
ಮಹಿಳೆಯರ ಕಳಸ, ಕನ್ನಡಿ ಹಾಗೂ ವಿವಿಧ ವಾದ್ಯಗಳು ಪಾಲ್ಗೊಂಡಿದ್ದವು. ಶಾಸಕ ಆರ್. ಬಸನಗೌಡ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿದಂತೆ ಅನೇಕ ಮುಖಂಡರು ಹಾಗೂ ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.