ADVERTISEMENT

ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಕೃಷ್ಣ ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 12:12 IST
Last Updated 10 ಏಪ್ರಿಲ್ 2021, 12:12 IST
ಕೃಷ್ಣ ಬೈರೇಗೌಡ
ಕೃಷ್ಣ ಬೈರೇಗೌಡ   

ಮಸ್ಕಿ: ‘ಹಣಬಲದಿಂದ ಚುನಾವಣೆ ಮಾಡುತ್ತಿರುವ ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ನಿರಂತರ ಹೋರಾಟ ರೂಪಿಸುತ್ತಿದೆ‘ ಎಂದು ಮಾಜಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಪ್ರತಾಪಗೌಡ ಪಾಟೀಲ ಅವರು ಚುನಾವಣೆಯಲ್ಲಿ ಜನರು ನೀಡಿದ ತೀರ್ಪನ್ನು ಹಣಕ್ಕೆ ಮಾರಾಟ ಮಾಡಿ ಬಿಜೆಪಿ ಸೇರಿದ್ದಾರೆ' ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಇದೀಗ ಮಸ್ಕಿ ಕ್ಷೇತ್ರ ಉಪ ಚುನಾವಣೆ ಎದುರಿಸುವಂತಾಗಿದೆ. ಬಿಜೆಪಿಯು ಉಪ ಚುನಾವಣೆಯಲ್ಲಿ ಗೆಲ್ಲಲು ಮತದಾರರಿಗೆ ಹಣದ ಹೊಳೆಯನ್ನೆ ಹರಿಸುವ ಮೂಲಕ ವಾಮ ಮಾರ್ಗದ ದಾರಿ ಹಿಡಿದಿದೆ‘ ಎಂದರು.

‘ಉಪ‌ ಚುನಾವಣೆಯಲ್ಲಿ ಅಧಿಕಾರಿಗಳು ಚುನಾವಣೆ ಆಯೋಗದ ಅಡಿಯಲ್ಲಿ ಕೆಲಸ ಮಾಡಬೇಕೆ ಹೊರತು ಸರ್ಕಾರದ, ಬಿಜೆಪಿಯ ಕೈಗೊಂಬೆಯಾಗಿ ಕರ್ತವ್ಯ ನಿರ್ವಹಿಸಬಾರದು. ಮಸ್ಕಿಯ ಮತಗಟ್ಟೆಗಳಲ್ಲಿ ಹಣ ಹಂಚಿಕೆ ಮಾಡಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನ್ಯಾಯ ಸಮ್ಮತ ಚುನಾವಣೆ ನಡೆಸಲು ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಜನರೆ ಕಾನೂನನ್ನು ಕೈಗೆತ್ತಿಕೊಳ್ಳಬೇಕಾದ ಸ್ಥಿತಿ ಬರುತ್ತದೆ. ಇದಕ್ಕೆ ಅಧಿಕಾರಿಗಳೇ ನೇರ ಹೊಣೆಯಾಗಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದರು.

ADVERTISEMENT

ಯಾವುದೇ ಚುನಾವಣೆ ಬರಲಿ‌, ರಾಜಕೀಯ ಪಕ್ಷಗಳು‌ ಹಣ ಹಂಚಿ ಮತ ಪಡೆಯುವ ವ್ಯವಸ್ಥೆಯನ್ನು ನಿಲ್ಲಿಸಬೇಕು ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಶಾಸಕ ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಶಾಸಕ ಎನ್.ಎಸ್. ಬೋಸರಾಜ, ಶರಣಪ್ಪ ಮಟ್ಟೂರ, ಕಾಂಗ್ರೆಸ್‌ನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಿ.ನಾಯಕ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.