ADVERTISEMENT

ಬಿಜೆಪಿ, ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ-ಡಿ.ಎಚ್.ಪೂಜಾರ

ಕರ್ನಾಟಕ ರೈತ ಸಂಘದ ಅಧ್ಯಕ್ಷ ಡಿ.ಎಚ್.ಪೂಜಾರ ಕರೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 15:24 IST
Last Updated 9 ಏಪ್ರಿಲ್ 2021, 15:24 IST

ಮಸ್ಕಿ: ‘ದೇಶದ ರೈತರನ್ನು ನಿರ್ಲಕ್ಷಿಸಿ ದೊಡ್ಡ ದೊಡ್ಡ ಉದ್ಯಮಿಗಳ ಪರವಾಗಿ ಇರುವ ಬಿಜೆಪಿ ಹಾಗೂ ಕಾಂಗ್ರೆಸ್ ಎರಡನ್ನು ಮಸ್ಕಿ ಉಪ ಚುನಾವಣೆಯಲ್ಲಿ ಸೋಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು‘ ಎಂದು ಕರ್ನಾಟಕ ರೈತ ಸಂಘ (ಕೆ ಆರ್ ಎಸ್) ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್. ಪೂಜಾರಿ ಕರೆ ನೀಡಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ‘ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ಬೇಕಾಗಿರಲಿಲ್ಲ. ಹಣದ ಆಸೆಗಾಗಿ ಜನರಿಂದ ಆಯ್ಕೆಯಾದ ಶಾಸಕ ಪ್ರತಾಪಗೌಡ ಪಾಟೀಲರು ಜನರ ಅಭಿಪ್ರಾಯ ಪಡೆಯದೆ ಮತ್ತೊಂದು ಪಕ್ಷಕ್ಕೆ ಸೇರಿ ಉಪ ಚುನಾವಣೆಗೆ ಕಾರಣರಾಗಿದ್ದಾರೆ’ ಎಂದರು.

’ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನಪರವಾಗಿಲ್ಲ. ಕಾಂಗ್ರೆಸ್ ಕೂಡಾ ಮುಖೇಶ ಅಂಬಾನಿ ಪರವಾಗಿ ಕೆಲಸ ಮಾಡುತ್ತಿದೆ. ಈ ಎರಡು ಪಕ್ಷಗಳು ರಾಷ್ಟ್ರಕ್ಕೆ ಮಾರಕ. ನಾಲ್ಕು ತಿಂಗಳಿನಿಂದ ರೈತರು ದೆಹಲಿಯಲ್ಲಿ ಹೋರಾಟ ಮಾಡುತ್ತಿದ್ದರೂ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ’ ಎಂದರು.

ADVERTISEMENT

ಹೀಗಾಗಿ ಮತದಾರರು 17 ರಂದು ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಬಿಟ್ಟು ಪಕ್ಷೇತರ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕು ಎಂದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ನಿಲೋಗಲ್, ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ದಿನ್ನಿ, ಮಾರುತಿ ಜಿನ್ನಾಪೂರ, ಬಿ.ಎಸ್. ಯರದಿಹಾಳ, ಸಿದ್ದಾರ್ಥ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.