ADVERTISEMENT

ಬಿಜೆಪಿ ಗೆಲುವು ಹಗಲುಗನಸು: ಟೀಕೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 13:05 IST
Last Updated 15 ಏಪ್ರಿಲ್ 2021, 13:05 IST
ಆರ್.ಧ್ರುವನಾರಾಯಣ
ಆರ್.ಧ್ರುವನಾರಾಯಣ   

ಸಿಂಧನೂರು: ‘ಮಸ್ಕಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರಿಗೆ ಮತಯಾಚನೆ ಮಾಡುತ್ತಿದೆ. ಆದರೆ ಬಿಜೆಪಿಯವರು ಹಣ ಹಂಚಿ, ಅಧಿಕಾರ ದುರುಪಯೋಗ ಪಡಿಸಿಕೊಂಡು, ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸಿ ಗೆಲ್ಲುವ ಹಗಲುಗನಸು ಕಾಣುತ್ತಿದ್ದಾರೆ‘ ಎಂದು ಮಸ್ಕಿ ಉಪಚುನಾವಣೆಯ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಆರ್.ಧ್ರುವನಾರಾಯಣ ಆಪಾದಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸ್ಕಿ ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡಿದ ಕಾರಣ ಬಿಜೆಪಿ ಮುಖಂಡರ ಮೇಲೆ ಐದು ಪ್ರಕರಣಗಳು ದಾಖಲಾಗಿವೆ. ಬಿಎಂಟಿಸಿ ಅಧ್ಯಕ್ಷ ನಂದೀಶರೆಡ್ಡಿ ಅವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಮಟ್ಟೂರು ಗ್ರಾಮದಲ್ಲಿ ₹ 50 ಲಕ್ಷ ಹಣ ತುಂಬಿದ ಚೀಲ ಸಿಕ್ಕಿದ್ದು, ಈ ದೃಶ್ಯವನ್ನು ಕಾಂಗ್ರೆಸ್ ಕಾರ್ಯಕರ್ತರು ಮೊಬೈಲ್‍ನಲ್ಲಿ ವಿಡಿಯೊ ಮಾಡಿದ್ದಾರೆ. ಆದರೆ ಮುದಗಲ್ ಪಿಎಸ್‌ಐ ಆ ಮೊಬೈಲ್ ಪಡೆದುಕೊಂಡು ವಿಡಿಯೊ ಡಿಲಿಟ್ ಮಾಡಿ ಆಡಳಿತ ಪಕ್ಷದ ಪರ ಕೆಲಸ ಮಾಡಿದ್ದಾರೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟಿಸಿದ ಕಾರಣ ಚುನಾವಣಾ ಉಸ್ತುವಾರಿ ಅಧಿಕಾರಿ ಆಮ್ಲಾನ್ ಬಿಸ್ವಾಸ್ ಅವರು ಪಿಎಸ್‌ಐ ಅವರನ್ನು ಮುದಗಲ್ ಠಾಣೆಯಿಂದ ವರ್ಗಾಯಿಸಿ, ತನಿಖೆಗೆ ಆದೇಶ ನೀಡಿದ್ದಾರೆ ಎಂದು ತಿಳಿಸಿದರು.

‘ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನತೆ ಬೇಸತ್ತಿದ್ದಾರೆ. ಕಳೆದ ಒಂದುವರೆ ವರ್ಷಗಳಿಂದ ಮಸ್ಕಿ ಕ್ಷೇತ್ರ ಅಭಿವೃದ್ದಿ ಹೊಂದದೆ ಅನಾಥವಾಗಿದೆ. ಕ್ಷೇತ್ರದ ಅಭಿವೃದ್ದಿ ಮರೆತು ಹಣಕ್ಕಾಗಿ ಮಾರಾಟವಾಗಿರುವ ಪ್ರತಾಪಗೌಡ ಪಾಟೀಲರಿಗೆ ಸ್ವಾಭಿಮಾನಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ಅನುಕಂಪದ ಅಲೆ ಇರುವ ಆರ್.ಬಸನಗೌಡ ತುರ್ವಿಹಾಳ ಅವರು 15 ಸಾವಿರ ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಕಾಂಗ್ರೆಸ್ ಪಕ್ಷ ಅಭಿವೃದ್ದಿಯ ಮಾನದಂಡಗಳ ಮೇಲೆ ಚುನಾವಣೆಯಲ್ಲಿ ಮತ ಕೇಳುತ್ತಿದೆ. ಉದ್ಯೋಗ ಖಾತ್ರಿ ಯೋಜನೆ ಮೂಲಕ ಗುಳೆ ಹೋಗುವುದು ತಪ್ಪಿಸಿ, ಉದ್ಯೋಗ ಕಲ್ಪಿಸುತ್ತಿರುವುದು ಕಾಂಗ್ರೆಸ್ ಕೊಡುಗೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಜಾರಿಗೆ ತಂದು ಬಡವರ ಹಸಿವು ನೀಗಿಸುವ ಕೆಲಸ ಮಾಡಿದ್ದರು. ಸಿದ್ದರಾಮಯ್ಯ ಅವರ ಬಗ್ಗೆ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರಿಗೆ ಮಾತನಾಡುವ ನೈತಿಕ ಹಕ್ಕು ಇಲ್ಲ. ಅವರು ಎಷ್ಟು ಪಕ್ಷ ಬದಲಾಯಿಸಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಅವರಿಗೆ ಜನ್ಮ ಕೊಟ್ಟು ಬೆಳೆಸಿದ್ದು ಕಾಂಗ್ರೆಸ್ ಪಕ್ಷ ಎಂಬುದು ಅವರು ಮರೆಯಬಾರದು. ಮಾತೃ ಪಕ್ಷಕ್ಕೆ ಕೈಕೊಟ್ಟು ಹೋಗಿರುವ ಅವರು ಹೆತ್ತ ತಾಯಿಯನ್ನು ಮರೆತಂತೆ’ ಎಂದು ಆರ್.ಧ್ರುವನಾರಾಯಣ ಟೀಕಿಸಿದರು.

ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ, ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.