ADVERTISEMENT

ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಮತ ನೀಡಿ: ಡಾ.ಪುಷ್ಪಾ

ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 12:18 IST
Last Updated 11 ಏಪ್ರಿಲ್ 2021, 12:18 IST
ಮಸ್ಕಿಯಲ್ಲಿ ಭಾನುವಾರ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು
ಮಸ್ಕಿಯಲ್ಲಿ ಭಾನುವಾರ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು   

ಮಸ್ಕಿ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನೇತೃತ್ವದ ಜನ ವಿರೋಧಿ ನೀತಿ ಖಂಡಿಸಿ ಭಾನುವಾರ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ ನೇತೃತ್ವದಲ್ಲಿ ಪಟ್ಟಣದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಕನಕವೃತ್ತದಲ್ಲಿ ಕೆಲ ಕಾಲ ಮಾನವ ಸರಪಳಿ ನಿರ್ಮಿಸಿದ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.

ನಂತರ ಆರಂಭವಾದ ಪ್ರತಿಭಟನೆ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ನಡೆಯಿತು. ಡಾ. ಪುಷ್ಪಾ ಅಮರನಾಥ ಸೇರಿದಂತೆ ನೂರಾರು ಮಹಿಳೆಯರು ತಲೆ ಮೇಲೆ ತರಕಾರಿ, ಸಿಲಿಂಡರ್ ಪ್ರತಿಕೃತಿ ಹೊತ್ತು ಮೆರವಣಿಗೆಯಲ್ಲಿ ಸಾಗಿದರು.

ADVERTISEMENT

ನಂತರ ನಡೆದ ಸಭೆಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ, ‘ಕಳೆದ ಎರಡು ಅವದಿಯಲ್ಲೂ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿಯು ಬಡವ, ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿದೆ. ಕಪ್ಪು ಹಣ ತರುತ್ತೇವೆ. ಯುವಕರಿಗೆ ಉದ್ಯೋಗ ಕೊಡುತ್ತೇವೆ. ಮಹಿಳಾ ಸಬಲೀಕರಣ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಈ ಎಲ್ಲಾ ಭರವಸೆಗಳು ಹುಸಿಯಾಗಿವೆ’ ಎಂದು ದೂರಿದರು.

ಅಡಿಗೆ ಅನಿಲ, ಡಿಸೇಲ್, ಪೆಟ್ರೋಲ್‌ ಸೇರಿದಂತೆ ದಿನನಿತ್ಯದ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನ ಸಾಮಾನ್ಯರಿಗೆ ಹೊರೆ ಮಾಡಿದೆ ಎಂದರು.

ಇಂತಹ ಜನ ವಿರೋಧಿ ಸರ್ಕಾರವನ್ನು ಕಿತ್ತು ಹಾಕಬೇಕು. ಇದಕ್ಕಾಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಕರೆ ನೀಡಿದರು.

ಮಹಿಳಾ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ರೇಖಾ ಶ್ರೀನಿವಾಸ, ಜಿಲ್ಲಾ ಘಟಕದ ಅಧ್ಯಕ್ಷೆ ನಿರ್ಮಾಲ ಬೆಣ್ಣೆ, ಶ್ರೀದೇವಿ ನಾಯಕ, ನವನೀತಾ ಸೇರಿದಂತೆ ಅನೇಕ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.