ADVERTISEMENT

‘ಹಣ ಹಂಚಿಕೆ ಪ್ರಕರಣ: ಅಧಿಕಾರಿಗಳ ಮೌನ ಸಲ್ಲ’-ಎಚ್.ಕೆ.ಪಾಟೀಲ್

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 15:10 IST
Last Updated 9 ಏಪ್ರಿಲ್ 2021, 15:10 IST
ಎಚ್.ಕೆ.ಪಾಟೀಲ್
ಎಚ್.ಕೆ.ಪಾಟೀಲ್   

ಸಿಂಧನೂರು: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಶಿವಮೊಗ್ಗ, ಹಾಸನ, ಮೈಸೂರಿನ ಬೆಂಬಲಿಗರು ಮಸ್ಕಿಯ ವಿವಿಧ ಗ್ರಾಮಗಳಲ್ಲಿ ಬಹಿರಂಗವಾಗಿಯೇ ಮತದಾರರಿಗೆ ಹಣ ಹಂಚಿಕೆ ಮಾಡಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‍ಗೆ ಮತ ಹಾಕುವಂತೆ ಹೇಳುತ್ತಿದ್ದಾರೆ. ಈ ಕುರಿತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚುನಾವಣಾಧಿಕಾರಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳುಮೌನ ವಹಿಸಿರುವುದೇಕೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರ್ವಾಪುರ, ದುರ್ಗಾಕ್ಯಾಂಪ್, ಬಳಗಾನೂರು, ತುರ್ವಿಹಾಳ ಗ್ರಾಮಗಳಲ್ಲಿ ಬಿಜೆಪಿ ಮುಖಂಡರು ಮತದಾರರನ್ನು ಒಂದೆಡೆ ಸೇರಿಸಿ ಹಣ ಹಂಚಿಕೆ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಚುನಾವಣೆಯ ಪಾವಿತ್ರ್ಯತೆಯನ್ನು ಬುಡಮೇಲಾಗಿಸಿ ಅಣಕಿಸುವಂತಿದೆ‘ ಎಂದರು.

ಈ ಕುರಿತು ವಿಡಿಯೊ ಪುರಾವೆ ಮೂಲಕ ರಾಜ್ಯ ಚುನಾವಣಾ ಆಯೋಗ ಹಾಗೂ ಚುನಾವಣಾಧಿಕಾರಿಗೆ ಕಾಂಗ್ರೆಸ್ ಪಕ್ಷ ದೂರು ಸಲ್ಲಿಸಲಿದೆ. ತಕ್ಷಣವೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಬಂಧಿಸಿ, ಮಸ್ಕಿ ಕ್ಷೇತ್ರದಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದರು.

ADVERTISEMENT

‘ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಎಚ್.ವಿಶ್ವನಾಥ, ಸಿ.ಟಿ.ರವಿ ದಿನಕ್ಕೊಂದು ಹೇಳಿಕೆ ನೀಡಿರುವುದು ಬಿಜೆಪಿಯಲ್ಲಿ ಕೆಟ್ಟ ವಾತಾವರಣ ಸ್ಪಷ್ಟಿಯಾಗಿದೆ. ಈ ಸರ್ಕಾರದಲ್ಲಿ ಅಭಿವೃದ್ದಿ ಕೆಲಸಗಳು ಆಗಿಲ್ಲ. ಬದಲಿಗೆ ಹಣ ಲೂಟಿ ಮಾಡುವ ಮೂಲಕ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮೇ ತಿಂಗಳ ನಂತರ ಸರ್ಕಾರ ಬಿದ್ದರೂ ಬೀಳಬಹುದು. ಆದ್ದರಿಂದ ಹಣ ಮತ್ತು ಅಧಿಕಾರಕ್ಕಾಗಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಿರುವ ಪಕ್ಷಾಂತರಿ ಪ್ರತಾಪಗೌಡ ಪಾಟೀಲ್ ಅವರನ್ನು ಮತದಾರರು ಸೋಲಿಸಿ, ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ ಅವರಿಗೆ ಬಹುಮತ ನೀಡಿ ಗೆಲ್ಲಿಸುವ ಮೂಲಕ ಜನಸೇವೆ ಮಾಡಲು ಅವಕಾಶ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ, ನಂಜಯ್ಯನಮಠ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ, ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ವೈ, ಮುಖಂಡರಾದ ಸಂಜಯ್ ಪಾಟೀಲ್, ಅಮರೇಗೌಡ, ಮಹೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.