ADVERTISEMENT

ಮಸ್ಕಿ | ಹೂವಿನಭಾವಿ ಕೆರೆ ಅಭಿವೃದ್ಧಿ ಪರಿಶೀಲನೆ: ₹2 ಕೋಟಿ ವೆಚ್ಚದ ಯೋಜನೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2025, 5:47 IST
Last Updated 20 ಅಕ್ಟೋಬರ್ 2025, 5:47 IST
ಮಸ್ಕಿ ತಾಲ್ಲೂಕಿನ ಹೂವಿನಭಾವಿಯಲ್ಲಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ಭಾನುವಾರ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ತಂಡದೊಂದಿಗೆ ಪರಿಶೀಲಿಸಿದರು
ಮಸ್ಕಿ ತಾಲ್ಲೂಕಿನ ಹೂವಿನಭಾವಿಯಲ್ಲಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ಭಾನುವಾರ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ತಂಡದೊಂದಿಗೆ ಪರಿಶೀಲಿಸಿದರು   

ಮಸ್ಕಿ: ಹೂವಿನಭಾವಿ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಮುಗಿಸಬೇಕು ಹಾಗೂ ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಾಲ್ಲೂಕಿನ ಹೂವಿನಭಾವಿ ಗ್ರಾಮದ ಬಳಿ ಸಣ್ಣ ನೀರಾವರಿ ಇಲಾಖೆಯಿಂದ ₹2 ಕೋಟಿ ವೆಚ್ಚದಲ್ಲಿ ನಡೆದಿರುವ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಭಾನುವಾರ ಹಿರಿಯ ಅಧಿಕಾರಿಗಳ ಜೊತೆ ಜಂಟಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಕೆರೆಗಳ ಅಭಿವೃದ್ಧಿ ಜೊತೆ ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಅಧಿಕಾರಿಗಳು ಸರ್ಕಾರ ನೀಡಿದ ಗಡುವಿನ ಒಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಿದರೆ ಮಾತ್ರ ಯೋಜನೆ ಸಾರ್ಥಕವಾಗುತ್ತದೆ ಮತ್ತು ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು. ಕಾಮಗಾರಿ ಅನುಷ್ಠಾನದಲ್ಲಿ ವಿಳಂಬ ಮಾಡಿದರೆ, ಗುಣಮಟ್ಟ ಕಾಪಾಡುವಲ್ಲಿ ನಿರ್ಲಕ್ಷ್ಯ ವಹಿಸಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದರು.

ADVERTISEMENT

ಮುಖಂಡ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಸಣ್ಣ ನೀರಾವರಿ ಇಲಾಖೆಯ ಮುಖ್ಯ ಎಂಜನಿಯರ್ ವೆಂಕಟೇಶ ಎಚ್. ಎಲ್, ಸೂಪರಡೆಂಟ್ ಎಂಜನಿಯರ್ ಲಿಂಗರಾಜ, ಕಾರ್ಯನಿರ್ವಾಹಕ ಎಂಜನಿಯರ್ ಬಿ.ಎಸ್. ಪಾಟೀಲ, ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ದೇವೆಂದ್ರಪ್ಪ, ಎಂಜನಿಯರ್ ಪ್ರವೀಣಕುಮಾರ ಸೇರಿದಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಇದ್ದರು.

ಹೂವಿನಭಾವಿ ಕೆರೆ ಅಭಿವೃದ್ಧಿ ಕಾಮಗಾರಿ ಕೆಲಸ ಇನ್ನೂ ಶೇ50 ರಷ್ಟು ಬಾಕಿ ಉಳಿದಿದೆ. ಶೀಘ್ರದಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ 
ಆರ್. ಬಸನಗೌಡ ತುರ್ವಿಹಾಳ ಶಾಸಕ

ಕೆರೆ ತುಂಬಿಸುವ ಯೋಜನೆ ಪರಿಶೀಲನೆ

ಮಸ್ಕಿ ತಾಲ್ಲೂಕಿನ 23 ಕೆರೆಗಳಿಗೆ ಕೃಷ್ಣ ನದಿಯಿಂದ ನೀರು ತುಂಬಿಸುವ ಯೋಜನೆಯ ವಿವಿಧ ಹಂತದ ಕಾಮಗಾರಿಗಳನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ಪರಿಶೀಲಿಸಿದರು. ಲಿಂಗಸುಗೂರು ತಾಲ್ಲೂಕಿನ ರಾಂಪೂರ ಬಳಿ ನಡೆಯುತ್ತಿರುವ ಯೋಜನೆಯ ಜಾಕ್ ವೆಲ್ ಕಾಮಗಾರಿ ಪರಿಶೀಲಿಸಿ ಭೇಗ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಎರಡನೇ ಹಂತದಲ್ಲಿ 176 ಕಿಮೀ ರವರೆಗೆ ಯೋಜನೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. 35 ಕಿಮೀವರೆಗೆ ಮಾತ್ರ ಸಾಮಾಗ್ರಿ ಬಂದಿದ್ದು ಶೀಘ್ರ ಉಳಿದ ಸಾಮಾಗ್ರ ತರಿಸಿಕೊಂಡು ಕಾಮಗಾರಿ ವೇಗ ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.