ಮಸ್ಕಿ: ತಾಲ್ಲೂಕು ಆಡಳಿತ ಕಚೇರಿ ‘ಪ್ರಜಾಸೌಧ’ ಕಟ್ಟಡ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಜಲ ಸಂಪನ್ಮೂಲ ಇಲಾಖೆಗೆ ಸೇರಿದ ವೆಂಕಟಾಪೂರ ರಸ್ತೆಯಲ್ಲಿ 5ಎಕರೆ ಭೂಮಿಯನ್ನು ಕಂದಾಯ ಇಲಾಖೆಗೆ ಪಡೆಯಲಾಗಿದೆ. ₹25 ಕೋಟಿ ವೆಚ್ಚದಲ್ಲಿ ತಾಲ್ಲೂಕು ಆಡಳಿತ ಕಚೇರಿಯ ನೀಲನಕ್ಷೆ ಸಿದ್ದವಾಗಿದೆ. ಕಟ್ಟಡ ನಿರ್ಮಾಣದ ಹೊಣೆಯನ್ನು ಹೌಸಿಂಗ್ ಬೋರ್ಡ್ಗೆ ವಹಿಸಲಾಗಿದ್ದು ₹8.50 ಕೋಟಿ ವೆಚ್ಚದ ಮೊದಲ ಹಂತದ ಕಾಮಗಾರಿಗೆ ಟೆಂಡರ್ ಆಗಿದ್ದು ಶೀಘ್ರದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಅವರು ತಿಳಿಸಿದರು.
ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಜಾಗದ ಕೊರತೆಯಿಂದ ಇಷ್ಟು ದಿನ ಯೋಜನೆ ನೆನೆಗುದಿಗೆ ಬಿದ್ದಿತ್ತು, ಇದೀಗ ವೆಂಕಟಾಪೂರ ರಸ್ತೆಯಲ್ಲಿ ಕಂದಾಯ ಇಲಾಖೆಗೆ ಸೇರಿದ 7.5 ಎಕರೆ ಜಮೀನನ್ನು ತಾಲ್ಲೂಕು ಕ್ರೀಡಾಂಗಣಕ್ಕೆ ಪಡೆಯಲಾಗುತ್ತಿದೆ ಎಂದರು.
ಕ್ರೀಡಾ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಅನುದಾನ ನೀಡಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದರು.
ಶೀಘ್ರದಲ್ಲಿ ಎಲ್ಲಾ ಮೂಲ ಸೌಕರ್ಯಗಳನ್ನು ಒಳಗೊಂಡ ಕ್ರೀಡಾಂಗಣ ನಿರ್ಮಾಣವಾಗಲಿದ್ದು ತಾಲ್ಲೂಕಿನ ಕ್ರೀಡಾಭಿಮಾನಿಗಳ ಬಹಳ ದಿನದ ಬೇಡಿಕೆ ಈಡೇರಿಸಲಾಗುವುದು ಎಂದು ತಿಳಿಸಿದರು.
ಪ್ರಜಾಸೌಧ ಹಾಗೂ ತಾಲ್ಲೂಕು ಕ್ರೀಡಾಂಗಣಕ್ಕೆ ತೆರಳುವ ರಸ್ತೆಯನ್ನು 80 ಅಡಿ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.