ಸತೀಶ ಜಾರಕಿಹೊಳಿ
ಸಿಂಧನೂರು: ‘ಕಾಂಗ್ರೆಸ್ ಪಕ್ಷದಲ್ಲಿ ಹೈ ಕಮಾಂಡ್ ತೀರ್ಮಾನವೇ ಅಂತಿಮ. ಆದರೆ ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ನಡೆದಿರುವ ಚರ್ಚೆ ಅನಾವಶ್ಯವಾಗಿದೆ. ಮಾಧ್ಯಮಗಳು ವಿನಾಃಕಾರಣ ಸುದ್ದಿ ಬಿತ್ತರಿಸುವ ಮೂಲಕ ರಾಜಕೀಯ ವಲಯದಲ್ಲಿ ಗೊಂದಲ ಸೃಷ್ಠಿಸುತ್ತಿವೆ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರಕ್ಕೆ ಭಾನುವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹೊಸ ಸೇತುವೆಗಳ ನಿರ್ಮಾಣಕ್ಕೆ ಬಜೆಟ್ನಲ್ಲಿ ಆದ್ಯತೆ ನೀಡಲಾಗುವುದು. ಕಳೆದ ವರ್ಷ ನೀಡಿದಂತೆ ಈ ಬಾರಿಯೂ ಲೋಕೋಪಯೋಗಿ ಇಲಾಖೆಗೆ ₹ 2 ಸಾವಿರ ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. ಇದಕ್ಕೆ ಅವರೂ ಸಕರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ’ ಎಂದು ಹೇಳಿದರು.
‘ರಾಜ್ಯದಲ್ಲಿ ಹೊಸ ಸೇತುವೆಗಳನ್ನು ನಿರ್ಮಿಸಲಾಗಿಲ್ಲ. ಈ ಬಾರಿ ಹೊಸ ಸೇತುವೆಗಳ ನಿರ್ಮಾಣಕ್ಕೆ ವಿಶೇಷ ಆದ್ಯತೆ ನೀಡಲಾಗುವುದು. ಉಳಿದಂತೆ ಕಾಮಗಾರಿಗಳನ್ನು ಮಳೆಗಾಲದ ನಂತರ ಕೈಗೆತ್ತಿಕೊಳ್ಳಲಾಗುವುದು. ರಾಯಚೂರು-ಸಿಂಧನೂರು ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಸಿರಗುಪ್ಪ-ಸಿಂಧನೂರು ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರರು ಓಡಿ ಹೋಗಿದ್ದಾರೆ. ಮತ್ತೊಮ್ಮೆ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.
ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಆರ್ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.