ADVERTISEMENT

ಹಫ್ತಾ ವಸೂಲಿ ಆರೋಪ: ಸಿಪಿಐ ವಿರುದ್ಧ ಸಚಿವರಿಗೆ ಪತ್ರ

​ಪ್ರಜಾವಾಣಿ ವಾರ್ತೆ
Published 21 ಮೇ 2019, 14:15 IST
Last Updated 21 ಮೇ 2019, 14:15 IST

ರಾಯಚೂರು: ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿರುವ ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಹಫ್ತಾ ವಸೂಲಿಯಲ್ಲಿ ತೊಡಗಿರುವ ಸಿಪಿಐ ಸಂಜೀವಕುಮಾರ ಅವರನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಗೃಹ ಸಚಿವರಿಗೆ ಈಚೆಗೆ ಪತ್ರ ಬರೆದಿದ್ದಾರೆ.

ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಫ್ತಾ ವಸೂಲಿ ಮಾಡಲಾಗುತ್ತಿದ್ದು, ತಮಗೆ ಬೇಕಾದವರಿಗೆ ಮರಳು ಸಾಗಣಿಕೆ ಅವಕಾಶ ನೀಡುತ್ತಿದ್ದಾರೆ. ಅವರಿಗೆ ಸಹಕಾರ ನೀಡದವರಿಗೆ ಮೇಲಧಿಕಾರಿಗಳ ಹೆಸರಿನಲ್ಲಿ ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಕಾನೂನು ಪ್ರಕಾರ ನಡೆದುಕೊಳ್ಳುವ ಗುತ್ತಿಗೆದಾರರು ಬೇಸತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ಕಾಮಗಾರಿಗಳಿಗೂ ಮರಳು ಸಾಗಿಸಲು ಒಪ್ಪುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಜನಪ್ರತಿನಿಧಿಗಳಿಗೆ ಕೂಡ ಉಡಾಫೆಯ ಉತ್ತರ ನೀಡುತ್ತಿದ್ದಾರೆ. ಸಾರ್ವಜನಿಕ ಸ್ನೇಹಿ ಆಡಳಿತವನ್ನು ಗಾಳಿಗೆ ತೂರಿ ಅಸಡ್ಡೆ ತೋರುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಕನ್ನಡಿ ಹಿಡಿದಂತಾಗಿದೆ. ತ್ವರಿತವಾಗಿ ಕ್ರಮ ಜರುಗಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.