ರಾಯಚೂರು: ಮುಂಗಾರು ಹಂಗಾಮಿಗೆ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆಯಾಗದಂತೆ ಈಗಿನಿಂದಲೇ ಎಚ್ಚರ ವಹಿಸಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಮುಂಗಾರು ಹಂಗಾಮಿನ ಪೂರ್ವ ಸಿದ್ದತೆಗಳ ಕುರಿತು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2021-22ನೇ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯ ಸುಮಾರು 4,79,545 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿಯನ್ನು ಹೊಂದಿದ್ದು, ಈ ಬಿತ್ತನೆ ಕ್ಷೇತ್ರಕ್ಕೆ ಅನುಗುಣವಾಗಿ ಕೃಷಿ ಇಲಾಖೆಯ ಕೇಂದ್ರ ಕಚೇರಿಯಿಂದ 4500 ಕ್ವಿಂಟಲ್ ಬಿತ್ತನೆ ಬೀಜ, 2,26,651 ಮೆಟ್ರಿಕ್ ಟನ್ಗಳಷ್ಟು ರಸಗೊಬ್ಬರ ಜಿಲ್ಲೆಗೆ ಹಂಚಿಕೆಯಾಗಿದೆ ಎಂದು ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಮುಂಗಾರು ಹಂಗಾಮಿನಲ್ಲಿ ವಿವಿಧ ರೀತಿಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ
ತೊಂದರೆಯಾಗದಂತೆ ಸಮರ್ಪಕವಾಗಿ ದಾಸ್ತಾನು ಮಾಡಿಕೊಂಡು, ವಿತರಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕಳಪೆ ಮತ್ತು ನಕಲಿ ಬಿತ್ತನೆ ಬೀಜ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ನಕಲಿ ಬೀಜಗಳು ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿಕೊಂಡು ಶಿಸ್ತಿನ ಕ್ರಮ ಕೈಗೊಳ್ಳಬೇಕು. ಕಳೆದ ವರ್ಷದ ನಕಲಿ ಬೀಜಗಳು ಮಾರಾಟಕ್ಕೆ ಸಿಬ್ಬಂದಿಸಿದ ಪ್ರಕರಣಗಳ ಪ್ರಗತಿ ಪರಿಶೀಲನೆ ವರದಿ ನೀಡುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.
ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಮದ್ ಅಲಿ, ಕೃಷಿ ಇಲಾಖೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಹಾಗೂ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ಸಹಾಯಕ ನಿರ್ದೇಶಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.