ಕವಿತಾಳ: ‘ಪಟ್ಟಣದಲ್ಲಿ ಸೊಳ್ಳೆಗಳ ಕಾಟ ಮಿತಿ ಮೀರಿದ್ದು ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಸಾರ್ವಜನಿಕರು ಆರೋಪಿಸಿದರು.
ಸತತವಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವುದು, ಚರಂಡಿ ಅಸ್ವಚ್ಛತೆ ಮತ್ತು ರಸ್ತೆ ಮೇಲೆ ಗಲೀಜು ಹರಿಯುತ್ತಿರುವ ಪರಿಣಾಮ ಕಳೆದ ಒಂದು ತಿಂಗಳಿಂದ ಸೊಳ್ಳೆಗಳು ವಿಪರೀತ ಹೆಚ್ಚಿದ್ದು ಜನರ ನೆಮ್ಮದಿ ಕೆಡಿಸಿವೆ.
‘ಮಳೆ ಮತ್ತಿತರ ತಾಂತ್ರಿಕ ಸಮಸ್ಯೆಗಳಿಂದ ಪದೇ ಪದೇ ವಿದ್ಯುತ್ ವ್ಯತ್ತಯ ಉಂಟಾಗುತ್ತಿದೆ. ಸೊಳ್ಳೆ ನಿರೋಧಕ ಮತ್ತು ಫ್ಯಾನ್ ಬಳಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾತ್ರಿ ನೆಮ್ಮದಿಯಾಗಿ ನಿದ್ದೆ ಮಾಡದಂತಾಗಿದೆ’ ಎಂದು ನಿವಾಸಿ ವೆಂಕಟೇಶ ಅರಿಕೇರಿ ಆರೋಪಿಸಿದರು.
‘ಸಂಜೆಯಾಗುತ್ತಲೇ ದೀಪದ ಹುಳುಗಳ ಕಾಟ ಹೆಚ್ಚಾಗುತ್ತದೆ. ಊಟ ಮಾಡಲಾಗುತ್ತಿಲ್ಲ. ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸ್ವಚ್ಛತೆ ಬಗ್ಗೆ ಮತ್ತು ಸೊಳ್ಳೆಗಳ ನಿಯಂತ್ರಣ ಮಾಡುವ ಕುರಿತು ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ರೋಗ ಹರಡುವ ಭೀತಿ ಕಾಡುತ್ತಿದೆ’ ಎಂದು ವೆಂಕಟೇಶ ಗಚ್ಚಿಮನಿ ದೂರಿದರು.
ಪಟ್ಟಣದಲ್ಲಿ ಈಗಾಗಲೇ ಲಾರ್ವಾ ಸಮೀಕ್ಷೆ ಮಾಡಲಾಗಿದೆ. ಶಂಕಿತ ಡೆಂಗಿ ಪ್ರಕರಣಗಳು ಪತ್ತೆಯಾಗಿಲ್ಲ. ಸೊಳ್ಳೆಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಎಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾಥಾ ಮಾಡಲಾಗಿದೆ. ಫಾಗಿಂಗ್ ಮಾಡುವಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮೃತ್ ರಾಠೋಡ್ ಹೇಳಿದರು.
ಈ ಕುರಿತು ಮಾಹಿತಿ ಪಡೆಯಲು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಗದೀಶ್ ಭಂಡಾರಿ ಅವರಿಗೆ ‘ಪ್ರಜಾವಾಣಿ’ ಕರೆ ಮಾಡಿದಾಗ, ಅವರು ಕರೆ ಸ್ವೀಕರಿಸಲಿಲ್ಲ.
**
ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಹೀಗಾಗಿ ರೋಗ ಹರಡುವ ಭೀತಿ ಕಾಡುತ್ತಿದೆ.
ರಾಜು ಯಾದವ, ಕವಿತಾಳ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.