ಮಾನ್ವಿ: ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಗ್ರಾಮೀಣ ಭಾಗದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ನೀರಿನ ರಭಸಕ್ಕೆ ಮುಷ್ಟೂರು ಗ್ರಾಮದ ಹಳ್ಳಕ್ಕೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಭಾನುವಾರ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ.
ಕಳೆದು ತಿಂಗಳು ಮಳೆಯಾದಾಗ ಈ ಸೇತುವೆ ಕೊಚ್ಚಿ ಹೋಗಿತ್ತು. ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಶಾಸಕ ಜಿ.ಹಂಪಯ್ಯ ನಾಯಕ ಸ್ಥಳಕ್ಕೆ ಭೇಟಿ ನೀಡಿ ತಾತ್ಕಾಲಿಕ ಸೇತುವೆ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದರು. ಇದೀಗ ಎರಡನೇ ಬಾರಿಗೆ ಹಳ್ಳದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದ್ದು ಮುಷ್ಟೂರು ಗ್ರಾಮಸ್ಥರಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಶಾಶ್ವತ ಸೇತುವೆ ನಿರ್ಮಾಣಕ್ಕೆ ಮನವಿ: 2009ರಲ್ಲಿ ಸಂಭವಿಸಿದ್ದ ನೆರೆ ಹಾವಳಿಯಿಂದ ಮುಷ್ಟೂರು ಹಳ್ಳದ ಸೇತುವೆ ಕೊಚ್ಚಿ ಹೋದ ಕಾರಣ ಸೇತುವೆ ಮೇಲ್ದರ್ಜೆಗೇರಿಸಿ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ತಾಂತ್ರಿಕ ಕಾರಣಗಳಿಂದಾಗಿ ಆ ಸೇತುವೆ ಕಾಮಗಾರಿ ಪೂರ್ಣಗೊಳ್ಳದೆ ನನೆಗುದಿಗೆ ಬಿದ್ದಿತ್ತು. ಕೆಲ ವರ್ಷಗಳ ಹಿಂದೆ ಆ ಅಪೂರ್ಣಗೊಂಡ ಸೇತುವೆಯೂ ನೀರಿನ ರಭಸಕ್ಕೆ ಕೊಚ್ಚಿ ಹೋಗಿತ್ತು. ಕಾರಣ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿತ್ತು. ಈ ತಾತ್ಕಾಲಿಕ ಸೇತುವೆ ಹಲವು ಬಾರಿ ಕೊಚ್ಚಿ ಹೋಗಿ ದುರಸ್ತಿಗೊಳ್ಳುವುದು ಸಾಮಾನ್ಯವಾಗಿದೆ. ಕಾರಣ ಶಾಶ್ವತವಾಗಿ ಎತ್ತರದ ಸೇತುವೆ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಲು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.