ಮಸ್ಕಿ: ‘ವೃಕ್ಷೋದ್ಯಾನ’ ನಿರ್ಮಾಣಕ್ಕೆ ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಗುರುವಾರ ತಾಲ್ಲೂಕಿನ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ಪಟ್ಟಣದ ಮಲ್ಲಿಕಾರ್ಜುನ ಬೆಟ್ಟದ ಅಯ್ಯಪ್ಪಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ಕಂದಾಯ ಇಲಾಖೆಗೆ ಸೇರಿದ ಸ್ಥಳ ಹೈಟೆಕ್ ಫಾರ್ಕ್ ನಿರ್ಮಾಣಕ್ಕೆ ಸೂಕ್ತ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸೂಚಿಸಿದರು.
ಈ ಜಾಗವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವಂತೆ ತಹಶೀಲ್ದಾರ್ ಮಂಜುನಾಥ ಬೋಗಾವತಿಗೆ ತಿಳಿಸಿದ ಅವರು,‘ಈಗಾಗಲೇ ಸರ್ಕಾರ ಹಣ ಬಿಡುಗಡೆ ಮಾಡಿದೆ. ಜಾಗ ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿ ಆರಂಭಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಲಿಂಗಸುಗೂರು ವಲಯ ಅರಣ್ಯಾಧಿಕಾರಿ ಸುಭಾಷ ಚಂದ್ರ ಉದ್ಯಾನ ನಿರ್ಮಾಣದ ಬಗ್ಗೆ ವಿವರಿಸಿದರು. 5 ಎಕರೆ ಪ್ರದೇಶದಲ್ಲಿ ಇದು ನಿರ್ಮಾಣವಾಗಲಿದೆ ಎಂದರು.
ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಐಎಎಸ್ ಪ್ರೊಬೇಷನರಿ ಅಧಿಕಾರಿ ಪುರುರಾಜಸಿಂಗ್ ಸೋಲಂಕಿ, ತಹಶೀಲ್ದಾರ್ ಮಂಜುನಾಥ ಬೋಗಾವತಿ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ್, ಸಿಪಿಐ ಬಾಲಚಂದ್ರ ಡಿ. ಲಕ್ಕಂ, ಮುಖಂಡರಾದ ನಿರುಪಾದೆಪ್ಪ ವಕೀಲ, ಬಸನಗೌಡ ಪೊಲೀಸ್ಪಾಟೀಲ, ಹನುಮಂತಪ್ಪ ಮುದ್ದಾಪೂರ, ಮಲ್ಲಯ್ಯ ಬಳ್ಳಾ, ಕಂದಾಯ ನಿರೀಕ್ಷಕ ಮಹಾಂತೇಶ, ಗ್ರಾಮ ಲೆಕ್ಕಾಧಿಕಾರಿ ಗಂಗಪ್ಪ ಇದ್ದರು.
ಮಹರ್ಷಿ ವಾಲ್ಮೀಕಿ ಶಿಲಾ ಪ್ರತಿಮೆ ಸ್ಥಾಪನೆ: ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ನೂತನ ಶಿಲಾ ಮೂರ್ತಿ ಪ್ರತಿಷ್ಠಾಪನೆಯ ಸ್ಥಳವನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ಗುರುವಾರ ಪರಿಶೀಲಿಸಿದರು.
ಶಿಲೆಯಲ್ಲಿ ಕೆತ್ತನೆ ಮಾಡಿದ ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ಈಗಿನ ವಾಲ್ಮೀಕಿ ವೃತ್ತದಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು. ಅಧಿಕಾರಿಗಳಿಗೆ ವೃತ್ತದ ನೀಲನಕ್ಷೆ ಸಿದ್ದಪಡಿಸುವಂತೆ ಸೂಚಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.