ADVERTISEMENT

ಗ್ರಾಹಕರ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ: ಕೆ.ವಿ.ಸುರೇಂದ್ರ ಕುಮಾರ್

ರಾಷ್ಟೀಯ ಗ್ರಾಹಕರ ದಿನಾಚರಣೆ: ಕೆ.ವಿ.ಸುರೇಂದ್ರ ಕುಮಾರ್

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 5:34 IST
Last Updated 25 ಡಿಸೆಂಬರ್ 2025, 5:34 IST
ರಾಯಚೂರು ನಗರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025ರ ಕಾರ್ಯಕ್ರಮವನ್ನು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ.ವಿ.ಸುರೇಂದ್ರ ಕುಮಾರ್ ಉದ್ಘಾಟಿಸಿದರು
ರಾಯಚೂರು ನಗರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025ರ ಕಾರ್ಯಕ್ರಮವನ್ನು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ.ವಿ.ಸುರೇಂದ್ರ ಕುಮಾರ್ ಉದ್ಘಾಟಿಸಿದರು   

ರಾಯಚೂರ: ‘ಗ್ರಾಹಕರ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ. ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು’ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ.ವಿ.ಸುರೇಂದ್ರ ಕುಮಾರ್ ಅವರು ಹೇಳಿದರು.

ಬುಧವಾರ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯುವುದು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ಖರೀದಿದಾರನ ಯೋಗಕ್ಷೇಮದ ದೃಷ್ಟಿಯಲ್ಲಿ ಗ್ರಾಹಕ ಹಕ್ಕುಗಳ ಬಗ್ಗೆ ಅರಿಯುವುದು ಅವಶ್ಯಕತೆಯಿದೆ. ಗ್ರಾಹಕರ ರಕ್ಷಣೆ ಸಮಾಜದ ಧ್ವನಿಯಾದಾಗ ಮಾತ್ರ ಗ್ರಾಹಕರ ಸಂರಕ್ಷಣೆ ಸಾಧ್ಯ’ ಎಂದರು.

ADVERTISEMENT

‘ಉತ್ಪನ್ನಗಳನ್ನು ಖರೀದಿಸುವಾಗ ಹೆಚ್ಚಿನ ಲಾಭದ ಸಲುವಾಗಿ ಕೆಲ ಮಾರಾಟಗಾರರು ಹೆಚ್ಚಿನ ಶುಲ್ಕವನ್ನು ವಿಧಿಸಿ ಗ್ರಾಹಕರಿಗೆ ವಂಚಿಸುತ್ತಾರೆ. ಮಾರಾಟಗಾರರಿಂದ ಆಗುವ ವಂಚನೆಯಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು ಎಂಬುದು ಸೇರಿದಂತೆ ಬೇರೆ ಬೇರೆ ವಿಷಯ ತಿಳಿಯುವುದು ಸೇರಿದಂತೆ ಜನಜಾಗೃತಿಗಾಗಿ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ’ ಎಂದರು.

ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಎ.ಸಾತ್ವಿಕ್ ಮಾತನಾಡಿ,‘ಗ್ರಾಹಕರು ಯಾವುದೇ ವಸ್ತು, ಸರಕುಗಳನ್ನು ಖರೀದಿಸುವ ಸಂದರ್ಭದಲ್ಲಿ ಆ ವಸ್ತುವಿನ ಗುಣಮಟ್ಟ, ಅವಧಿ ಮುಂತಾಗಿ ಪರಿಶೀಲಿಸಿ ಕಡ್ಡಾಯವಾಗಿ ರಸೀದಿ ಪಡೆದುಕೊಳ್ಳಬೇಕು’ ಎಂದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಪ್ರಭುದೇವ್ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಜಾಗೃತಿ: ಕರ್ನಾಟಕ ಆಹಾರ ನಾಗರಿಕ ಮತ್ತು ಸರಬರಾಜು ನಿಗಮ ನಿಯಮಿತದಿಂದ ಸಾರ್ವಜನಿಕ ವಿತರಣೆಯಡಿ ವಿತರಿಸಲಾದ ಸಾರವರ್ಧಿತ ಅಕ್ಕಿಯ ಕುರಿತು, ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ತೂಕ ಮತ್ತು ಅಳತೆ ಹಾಗೂ ಮೆ: ಸುಮಂತ್ ಫ್ಲಾಮೋಜನ್ ಇಂಡೇನ್ ಗ್ಯಾಸ್ ಏಜೆನ್ಸಿಯಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯ ಎಲ್.ಪಿ.ಜಿ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು.

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮದ್, ಜಿಲ್ಲಾ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ನಜೀರ್, ವಕೀಲ ಗೌರೀಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಅಮೃತಾ ಪಿ.ಚವ್ಹಾಣ, ಕರ್ನಾಟಕ ಆಹಾರ ನಾಗರಿಕ ಮತ್ತು ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕ ಪ್ರಕಾಶ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ವ್ಯವಸ್ಥಾಪಕ ಹರೀಶ್, ಪ್ರಥಮ ದರ್ಜೆ ಸಹಾಯಕ ಜಿ.ಶ್ರೀಹರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.