
ಶಿಶು (ಸಾಂದರ್ಭಿಕ ಚಿತ್ರ)
ಸಿಂಧನೂರು: ನಗರದ ಪಿಡಬ್ಲ್ಯೂಡಿ ಕ್ಯಾಂಪ್ನಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನವಜಾತು ಶಿಶು ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಪಾಲಕರು, ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ತಿಡಿಗೋಳ ಗ್ರಾಮದ ಚಂದ್ರಕಲಾ ಶುಕ್ರವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಬೆಳಗ್ಗೆ ಹೆರಿಗೆಯಾಗಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಕ್ಕಿಲ್ಲ. ಇದಕ್ಕೆ ವೈದ್ಯರ ನಿಷ್ಕಾಳಜಿಯೇ ಕಾರಣ ಎಂದು ಪಾಲಕರು ಆರೋಪಿಸಿ ಪ್ರತಿಭಟಿಸಿದರು.
ಗರ್ಭಿಣಿ ಶುಕ್ರವಾರ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಡಾ.ನಾಗರಾಜ ಕಾಟ್ವಾ ಶನಿವಾರ ಬೆಳಿಗ್ಗೆಯವರೆಗೆ ತಮ್ಮ ಸೇವಾ ಅವಧಿಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಶನಿವಾರ ಬೆಳಗ್ಗೆ ಹೆರಿಗೆಯಾಗಿದ್ದು ಆ ಸಮಯದಲ್ಲಿ ಡಾ.ಶಕುಂತಲಾ ಕರ್ತವ್ಯದಲ್ಲಿದ್ದರು ಎನ್ನಲಾಗಿದೆ. ಆದರೆ ಇಬ್ಬರು ವೈದ್ಯರು ಸಮಯಕ್ಕೆ ಸರಿಯಾಗಿ ಗರ್ಭಿಣಿಗೆ ಚಿಕಿತ್ಸೆ ನೀಡಿಲ್ಲ ಎನ್ನುವುದು ಪಾಲಕರ ವಾದ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ‘ಸುಡಾ’ ಅಧ್ಯಕ್ಷ ಬಾಬುಗೌಡ ಬಾದರ್ಲಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಸವರಾಜ ಹಿರೇಗೌಡರ್, ಶಿವನಗೌಡ ಎಲೆಕೂಡ್ಲಗಿ ಮತ್ತಿತರರು ಭೇಟಿ ನೀಡಿ ಗರ್ಭಿಣಿ ಕುಟುಂಬಸ್ಥರು ಹಾಗೂ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.
ಆಸ್ಪತ್ರೆಯ ಮುಂದೆ ಪ್ರತಿಭಟನೆಯ ವಿಷಯ ತಿಳಿದು ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವೀರಾರೆಡ್ಡಿ ಎಚ್, ಸಂಚಾರಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಚಂದ್ರಶೇಖರ ಹಿರೇಮಠ ಅವರು ತಮ್ಮ ಸಿಬ್ಬಂದಿಯೊಂದಿಗೆ ಆಸ್ಪತ್ರೆಗೆ ದೌಡಾಯಿಸಿ ಕುಟುಂಬಸ್ಥರನ್ನು ಸಮಾಧಾನಗೊಳಿಸಿ ಯಾವುದೇ ರೀತಿ ಗಲಾಟೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದರು.
ಈ ಕುರಿತು ಪ್ರಸೂತಿ ತಜ್ಞ ಡಾ.ನಾಗರಾಜ ಕಾಟ್ವಾ ಅವರನ್ನು ಸಂಪರ್ಕಿಸಿದಾಗ ‘ನನ್ನ ಕರ್ತವ್ಯದ ಅವಧಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ ನಾನು ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಿದ್ದೇನೆ. ತಾಯಿ ಹೊಟ್ಟೆಯಲ್ಲೇ ಮಗು ಕರುಳ ಬಳ್ಳಿಯನ್ನು ಕುತ್ತಿಗೆಗೆ ಸುತ್ತಿಕೊಂಡಿದ್ದರಿಂದ ಹೆರಿಗೆ ನಂತರ ಮಗುವಿನ ಸಾವಾಗಿದೆ. ನಾನು ಶುಕ್ರವಾರ ಸಂಜೆಯಿಂದ ಶನಿವಾರ ಬೆಳಿಗ್ಗೆವರೆಗೆ ಸೇವೆಯಲ್ಲಿದ್ದೆ. ಹೆರಿಗೆ ಸಮಯದಲ್ಲಿ ಡಾ.ಶಕುಂತಲಾ ಕರ್ತವ್ಯದಲ್ಲಿದ್ದರು’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.