ಸಿಂಧನೂರು: ಸಿಂಧನೂರು ಸೀಮಾ ಸೇರಿದಂತೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ನೀರಾವರಿ ಜಮೀನು ಇದ್ದು, ಈಗ ಭತ್ತದ ಬೆಳೆ ಕೈಗೆ ಬಂದಿದೆ. ಕೂಡಲೇ ರಸ್ತೆಯ ಎರಡು ಕಡೆಗಳಲ್ಲಿ ರಸ್ತೆ ಅಗಲೀಕರಣಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಪುನಃ ಬೇಸಿಗೆ ಬೆಳೆಯನ್ನು ರೈತರು ನಾಟಿ ಮಾಡಿದರೆ ಏಪ್ರಿಲ್ ತಿಂಗಳವರೆಗೆ ಕಾಯಬೇಕಾಗುತ್ತದೆ ಎಂದು ರಾಜ್ಯ ಹೆದ್ದಾರಿ ನಿರ್ಮಾಣದ ಅಧಿಕಾರಿಗಳಿಗೆ ಶಾಸಕ ಹಂಪನಗೌಡ ಬಾದರ್ಲಿ ಸೂಚಿಸಿದರು.
ಸಿಂಧನೂರು-ರಾಯಚೂರು ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೋಮವಾರ ನಗರಸಭೆ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ರಸ್ತೆಯ ಪಕ್ಕದಲ್ಲಿ ವಿದ್ಯುತ್ ಕಂಬಗಳಿದ್ದು, ಕಾಮಗಾರಿ ಪ್ರಾರಂಭಿಸುವ ಪೂರ್ವದಲ್ಲಿ ಅವುಗಳನ್ನು ಸ್ಥಳಾಂತರ ಮಾಡುವಂತೆ ಜೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ ಜಾದವ್ ಅವರಿಗೆ ಸೂಚಿಸಿದರು.
ಅರಣ್ಯ ಇಲಾಖೆ ಅಧಿಕಾರಿ ಸುರೇಶ 0 ದಿಂದ 70 ಕಿ.ಮೀ.ವರೆಗಿನ ರಸ್ತೆಯಲ್ಲಿ ಬರುವ ಗಿಡಗಳನ್ನು ತೆರವುಗೊಳಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.
ರಾಜ್ಯ ಹೆದ್ದಾರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಮುರುಳೀಧರ್ ಮಾತನಾಡಿ, ಏಳುಮೈಲ್ ಕ್ಯಾಂಪಿನಿಂದ ಮಾನ್ವಿಯವರೆಗೆ ಕೆಲಸ ಪ್ರಾರಂಭಿಸಲಾಗಿದ್ದು, ಇನ್ನು ಇತ್ತ ಕಡೆ ಕೆಲಸ ಆರಂಭಿಸಿಲ್ಲ. ಭೂಸ್ವಾಧೀನ ಪ್ರಕ್ರಿಯೆಯೂ ಪೂರ್ಣಗೊಂಡಿಲ್ಲ ಎಂದು ಹೇಳಿದರು.
ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಕೈಗೊಳ್ಳಬಹುದಾದ ರಸ್ತೆ ವಿಭಜಕ, ವಿದ್ಯುತ್ ಕಂಬ, ಅಲ್ಲಲ್ಲಿ ಸೇತುವೆಗಳ ನಿರ್ಮಾಣ ಮತ್ತಿತರ ವಿವರಗಳನ್ನು ಶಾಸಕರಿಗೆ ಮನವರಿಕೆ ಮಾಡಿದರು.
ತಹಶೀಲ್ದಾರ್ ಅರುಣ್ ಎಚ್.ದೇಸಾಯಿ, ಭೂಸ್ವಾಧೀನ ಅಧಿಕಾರಿ ಶೃತಿ, ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ, ಪೌರಾಯುಕ್ತ ಮಂಜುನಾಥ ಗುಂಡೂರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.