ರಾಯಚೂರು: ಪರಿಸರ ಉಳಿಸಲು ಮುಂದಾಗಿರುವ ಪರಿಸರ ಪ್ರೇಮಿ ಈರಣ್ಣ ಕೋಸಗಿ ಅವರು ‘ಒಂದು ಕರೆ ಒಂದು ಸಸಿ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಕರೆ ಮಾಡಿದರೆ ಸಾಕು ಜನರು ಬಯಸುವ ಸ್ಥಳಕ್ಕೆ ಬಂದು ಸಸಿ ನೆಡುತ್ತಿದ್ದಾರೆ ಎಂದು ಯುವ ಸಾಹಿತಿ ಈರಣ್ಣ ಬೆಂಗಾಲಿ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇತಾಜಿ ನಗರದ ನಿವಾಸಿಯಾದ ಈರಣ್ಣ ಕೋಸಗಿಯವರು 13 ವರ್ಷಗಳಿಂದ ಸಸಿಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದಾರೆ. ಸಾವಿರಾರು ಸಸಿಗಳನ್ನು ನೆಟ್ಟು ಹೆಮ್ಮರಗಳನ್ನಾಗಿ ಬೆಳೆಸಿ ಪರಿಸರ ಉಳಿಸಲು ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ನಗರ ವ್ಯಾಪ್ತಿಯಲ್ಲಿನ ಮನೆ, ಶಾಲೆ, ಕಾಲೇಜು ಹಾಗೂ ವಿವಿಧ ಕಚೇರಿಯ ಆವರಣದಲ್ಲಿ ಸಸಿಗಳನ್ನು ನಿರಂತರವಾಗಿ ನೆಡುವ ಸಲುವಾಗಿ ಈ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಸಾರ್ವಜನಿಕರು ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಿಂದ ಸರಿಯಾಗಿ ಮಳೆಯಿಲ್ಲದೇ ಬರಗಾಲವಿದೆ. ಇದರಿಂದ ಮರಗಳ ನಾಶವಾಗುತ್ತಿವೆ. ಆದ್ದರಿಂದ ಹಸಿರುಮಯ ಮಾಡಲು ಸಸಿಗಳನ್ನು ನೆಟ್ಟು, ಪೋಷಿಸಬೇಕಾಗಿದೆ. ಇಲ್ಲದಿದ್ದರೆ ಉಳಿಗಾಲವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಪರಿಸರ ಪ್ರೇಮಿ ಈರಣ್ಣ ಕೋಸಗಿ ಮಾತನಾಡಿ, ಮಳೆಯಿಲ್ಲದ ಪರಿಣಾಮ ಅರಣ್ಯ ಪ್ರದೇಶದಲ್ಲಿ ನೆಟ್ಟ ಸಸಿಗಳಿಗೆ ಟ್ಯಾಂಕರ್ ಮೂಲಕ ನೀರು ಹರಿಸಿದರೂ, ಹಲವು ಗಿಡಗಳು ನಾಶವಾಗಿವೆ. ಸಂಬಂಧಿಸಿದ ಅಧಿಕಾರಿಗಳು ಕೂಡ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.