ರಾಯಚೂರು: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಯಾವುದೇ ಲೋಪವಿಲ್ಲದೆ ಕ್ರಮಬದ್ಧವಾಗಿ ಆಸ್ತಿ ತೆರಿಗೆ ಹಾಗೂ ಕರ ವಸೂಲಿ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಧರ್ ಕುರೇರ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗಾಗಿ ಮಂಗಳವಾರ ಏರ್ಪಡಿಸಿದ್ದ ಪಂಚತಂತ್ರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಆದಾಯದ ಮೂಲಗಳಲ್ಲಿ ಆಸ್ತಿ ತೆರಿಗೆಯೇ ಪ್ರಮುಖವಾಗಿದೆ. ಹೀಗಾಗಿ ಪಂಚತಂತ್ರ ನಿರ್ವಹಣೆ ಕುರಿತಾದ ತರಬೇತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕರ ವಸೂಲಿಯಲ್ಲಿ ತಪ್ಪುಗಳನ್ನು ಮಾಡಬಾರದು. ಒಂದು ವೇಳೆ ಲೋಪಗಳನ್ನು ಮಾಡಿರುವುದು ಕಂಡುಬಂದರೆ, ಕ್ರಮ ಕೈಗೊಳ್ಳಲಾಗುವುದು. ಗ್ರಾಮ ಪಂಚಾಯಿತಿ ಆಸ್ತಿ ವಿವರವನ್ನು ಕಾಲಕಾಲಕ್ಕೆ ಪಂಚತಂತ್ರದಲ್ಲಿ ನಮೂದಿಸಬೇಕು ಎಂದು ಹೇಳಿದರು.
ಇತ್ತೀಚೆಗೆ ಗ್ರಾಮ ಪಂಚಾಯಿತಿಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕರಗಳನ್ನು ಸಂಗ್ರಹಿಸುತ್ತಿಲ್ಲ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನಧಿಕೃತ ಕಟ್ಟಡಗಳನ್ನು ನಿರ್ಮಾಣ ಮಾಡುವವರಿಗೆ ನೋಟಿಸ್ ಜಾರಿಗೊಳಿಸಬೇಕು. ಕಟ್ಟಡ ತೆರಿಗೆ ವಸೂಲಿ ಮಾಡಬೇಕು. ಪ್ರತಿ ಕಟ್ಟಡದ ಸ್ಥಳ ಪರಿಶೀಲಿಸಿ ಉದ್ದ, ಅಗಲ ಲೆಕ್ಕಹಾಕಿಯೇ ಕರ ವಿಧಿಸಬೇಕು ಎಂದು ತಿಳಿಸಿದರು.
ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದು ಕೂಡಾ ಗ್ರಾಮ ಪಂಚಾಯಿತಿಯ ಪ್ರಮುಖ ಜವಾಬ್ದಾರಿಗಳಲ್ಲಿ ಒಂದಾಗಿದೆ. ಸ್ವಚ್ಛ ಭಾರತ ಮಿಷನ್ ಮತ್ತು ಗ್ರಾಮ ನೈರ್ಮಲ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.