ರಾಯಚೂರು: ಸಂಗೀತ ರತ್ನ ಪಂಡಿತ್ ಸಿದ್ದರಾಮ ಜಂಬಲದಿನ್ನಿ ಅವರ 33ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಡಿಸೆಂಬರ್ 25ರಂದು ಸಂಜೆ 5ಕ್ಕೆ ಉದಯನಗರದ ಸ್ವರ ಸಂಗಮ ಸಂಗೀತ ವಿದ್ಯಾಸಂಸ್ಥೆಯಲ್ಲಿ ಸಂಗೀತ ಸಮ್ಮೇಳನ ಆಯೋಜಿಸಲಾಗಿದೆ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಕ್ಲಾರಿಯೋನೆಟ್ ವಾದಕ ಪಂಡಿತ್ ನರಸಿಂಹಲು ವಡವಾಟಿ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯರು, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರ ಶಿವಾಚಾರ್ಯ, ಗಬ್ಬೂರು ಬೂದಿ ಬಸವೇಶ್ವರ ಸಂಸ್ಥಾನ ಮಠದ ಬೂದಿಬಸವೇಶ್ವರ ಶಿವಾಚಾರ್ಯ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸುವರು. ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಹರೀಶ ರಾಮಸ್ವಾಮಿ ಉದ್ಘಾಟಿಸುವರು. ಶಾಸಕ ಡಾ.ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಡಾ.ಅವಿನಾಶ ರಾಜೇಂದ್ರ ಮೆನನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ಉಪನಿರ್ದೇಶಕಿ ಮಂಗಳಾ ನಾಯಕ, ಶಿವಪ್ರಸಾದ್ ಜಂಬಲದಿನ್ನಿ ಭಾಗವಹಿಸಿವರು ಎಂದರು.
ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕ ಪಂ. ನಾಗರಾಜ ಹವಾಲ್ದಾರ್, ಓಂಕಾರ್ ಹವಾಲ್ದಾರ್, ಕೇದಾರನಾಥ ಹವಾಲ್ದಾರ್, ಸಮೀರ್ ಹವಾಲ್ದಾರ್, ಎಚ್. ಸರಸ್ವತಿ ರಾಜಶೇಖರ್ ಸೇರಿದಂತೆ ಇತರೆ ಕಲಾವಿದರು ಭಾಗವಹಿಸುವರು. ಸ್ವರ ಸಂಗಮ ಸಂಗೀತ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಲಿದೆ.
ಗೌರವ ವಂದನೆ, ನಿವೃತ್ತ ಐಎಎಸ್ ಅಧಿಕಾರಿ ಅವರಿಂದ ಸಂಗೀತ ಸಂತ ಸಾಕ್ಷ್ಯ ಚಿತ್ರ ಹಾಗೂ ನಾದ ಸನ್ನಿಧಿ ಅಭಿನಂದನಾ ಗ್ರಂಥ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಪತ್ರಕರ್ತ ಕೆ.ಎನ್.ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.