ADVERTISEMENT

ಹಡಪದ ಸಮಾಜದ ಅವಹೇಳನ: ಶ್ಯಾಮನೂರು ಶಿವಶಂಕರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2023, 16:15 IST
Last Updated 26 ಡಿಸೆಂಬರ್ 2023, 16:15 IST
ರಾಯಚೂರಿನ ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತದ ಅಧಿಕಾರಿಯ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು
ರಾಯಚೂರಿನ ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತದ ಅಧಿಕಾರಿಯ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು   

ರಾಯಚೂರು: ಹಡಪದ ಸಮಾಜವನ್ನು ಅವಹೇಳನ ಮಾಡಿದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ಯಾಮನೂರು ಶಿವಶಂಕರಪ್ಪನವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಒತ್ತಾಯಿಸಿದೆ.

ಈ ಕುರಿತು ರಾಯಚೂರು ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ದಾವಣಗೆರೆಯಲ್ಲಿ ಈಚೆಗೆ ನಡೆದ ವೀರಶೈವ ಲಿಂಗಾಯತ ಸಮಾಜದ ಸಮಾವೇಶದ ಸಂದರ್ಭದಲ್ಲಿ ಮಾತನಾಡುವಾಗ ಹಡಪದ ಸಮಾಜ ಕುಲ ವೃತ್ತಿ (ಕ್ಷೌರಿಕ) ಬಗ್ಗೆ ನಿಷೇಧಿತ ಪದ ಬಳಕೆ ಮಾಡಿ ಅವಮಾನ ಮಾಡಿದ್ದಾರೆ. ಕೂಡಲೇ ಅವರ ವಿರುದ್ಧ ಜಾತಿ ನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಹಡಪದ ಸಮಾಜವೂ ಆರ್ಥಿಕ, ಸಾಮಾಜಿಕ ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಹಿಂದುಳಿದಿದ್ದು, 12ನೇ ಶತಮಾನದಲ್ಲಿ ಕ್ರಾಂತಿಕಾರಿ ಬಸವಣ್ಣನವರು ಹಡಪದ ಸಮಾಜದ ಕುಲಗುರು ಹಡಪದ ಅಪ್ಪಣ್ಣನವರನ್ನು ಸಹೋದರರಂತೆ ಭಾವಿಸಿ ಅನುಭವನ ಮಂಟಪದಲ್ಲಿ ಆಪ್ತ ಕಾರ್ಯದರ್ಶಿ ಹುದ್ದೆ ನೀಡಿ ಗೌರವ ಸ್ಥಾನ ನೀಡಿ ಲಿಂಗ ಧಿಕ್ಷೆ ನೀಡಿ ಲಿಂಗಾಯತ ಒಳ ಪಂಗಡ ಸೇರಿಸಿದ್ದರು. ಆದರೆ ಶ್ಯಾಮನೂರು ಶಿವಶಂಕರಪ್ಪ ಅವಹೇಳನಕಾರಿ ಮಾತನಾಡಿದ್ದು ಖಂಡನೀಯ. 

ADVERTISEMENT

ಪದೇ ಪದೇ ರಾಜಕೀಯ ನಾಯಕರು ಕ್ಷೌರಿಕ ವೃತ್ತಿಯ ಬಗ್ಗೆ ಮಾತನಾಡುವಾಗ ನಿಷೇಧಿತ ಪದ ಬಳಕೆ ಮಾಡುವ ಪ್ರಕರಣ ನಡೆಯುತ್ತಿದ್ದು ದುರಾದೃಷ್ಟಕ ಸಂಗತಿ. ಸಮಾಜಕ್ಕೆ ಅಗೌರವ ತೋರಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಧನಂಜಯ, ಪ್ರಧಾನ ಕಾರ್ಯದರ್ಶಿ ಮಂಜುಳಾ, ಉಪಾಧ್ಯಕ್ಷ ರವಿಕುಮಾರ, ಪ್ರಶಾಂತ ಕುಮಾರ ಉಪಸ್ಥಿತರಿದ್ದರು.

ರಾಯಚೂರಿನ ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತದ ಅಧಿಕಾರಿಯ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.