ರಾಯಚೂರು: ಕರ್ತವ್ಯದಲ್ಲಿಯೇ ಹೆಚ್ಚು ಸಮಯವನ್ನು ಕಳೆಯುವ ಪೊಲೀಸರು ತಮ್ಮ ಕುಟುಂಬ ಹಾಗೂ ವೈಯಕ್ತಿಕ ಜೀವನಕ್ಕೂ ಸಮಯಾವಕಾಶ ನೀಡಿ ಖುಷಿಯಾಗಿ ಕಾಲ ಕಳೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪೊಲೀಸ್ ಧ್ವಜಾ ದಿನಾಚರಣೆಯಲ್ಲಿ ಮಾತನಾಡಿದರು.
‘ಬಾಲ್ಯದಿಂದ ನನಗೆ ಪೊಲೀಸ್ ಇಲಾಖೆ ಇಷ್ಟ ಹಾಗೂ ಪ್ರಭಾವ ಬೀರಿದ್ದು, ಹಲವು ಕ್ರೀಡೆಗಳಲ್ಲಿ ಭಾಗವಹಿಸಿ ದೈಹಿಕ ಸದೃಢತೆಗೆ ಗಮನ ನೀಡಿದ್ದೇನೆ. ಪೊಲೀಸರು ಒತ್ತಡದಲ್ಲಿ ಕೆಲಸ ಮಾಡಬೇಕಿದ್ದು ತಮ್ಮ ಕುಟುಂಬ ಸದಸ್ಯರಿಗೆ ಸಮಯ ನೀಡಲು ಆಗದಿರಬಹುದು. ಇದರಿಂದ ಕೌಟುಂಬಿಕ ಸಮಸ್ಯೆಗೆ ಕಾರಣವಾಗಬಹುದು. ಕರ್ತವ್ಯದ ಜೊತೆ ಕುಟುಂಬ ಸದಸ್ಯರ ಜೊತೆಗೆ ಕಾಲ ಕಳೆಯಬೇಕು. ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸವನ್ನು ನೀಡಿ ಅಧಿಕಾರಿಗಳಾಗಿ ಮಾಡಬೇಕು. ಸರ್ಕಾರದಿಂದ ಪೊಲೀಸರಿಗೆ ಅನೇಕ ಸೌಲಭ್ಯವಿದ್ದು ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.
ನಿವೃತ್ತ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಬಿ.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋವಿಡ್ ಆರಂಭದ ಸಂದರ್ಭದಲ್ಲಿ ಪೊಲೀಸರು ತಮ್ಮ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಜಿಲ್ಲೆಯ ಐದು ಜನ ಪೊಲೀಸ್ ಸಿಬ್ಬಂದಿ ಕೋವಿಡ್ ಗೆ ಬಲಿಯಾಗಿದ್ದು ದುರಾದೃಷ್ಟಕರ ಸಂಗತಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕಂ ಪ್ರಕಾಶ ಅಮ್ರಿತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಡಿವೈಎಸ್ಪಿ ಶಿವನಗೌಡ ಪಾಟೀಲ ಮತ್ತಿತರರು ಇದ್ದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.