ADVERTISEMENT

‘ಶಾಸಕ ಶಿವನಗೌಡ ನಾಯಕ ಜನ್ಮದಿನ: ಅರ್ಥಪೂರ್ಣ ಆಚರಣೆ’

ಅಭಿಮಾನಿಗಳ ಬಳಗ, ಸಾಮಾಜಿಕ ಸೇವಾ ಸಮಿತಿಯಿಂದ ಅಭಿನಂದನಾ ಸಮಾರಂಭ 14ರಂದು

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 4:03 IST
Last Updated 6 ಜುಲೈ 2022, 4:03 IST
ಎಸ್.ತಿಮ್ಮಾರೆಡ್ಡಿ ಭೋಗಾವತಿ
ಎಸ್.ತಿಮ್ಮಾರೆಡ್ಡಿ ಭೋಗಾವತಿ   

ಮಾನ್ವಿ: ‘ಜುಲೈ14ರಂದು ದೇವದುರ್ಗ ಕ್ಷೇತ್ರದ ಶಾಸಕ ಕೆ.ಶಿವನಗೌಡ ನಾಯಕ ಅವರ 45ನೇ ಹುಟ್ಟುಹಬ್ಬದ ಅಂಗವಾಗಿ ಮಾನ್ವಿ ಪಟ್ಟಣದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಎಸ್.ತಿಮ್ಮಾರೆಡ್ಡಿ ಭೋಗಾವತಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು,‘ಮಾನ್ವಿ ಹಾಗೂ ಸಿರವಾರ ತಾಲ್ಲೂಕುಗಳ ಕೆ.ಎಸ್.ಎನ್ ಅಭಿಮಾನಿಗಳ ಬಳಗ ಮತ್ತು ಸಾಮಾಜಿಕ ಸೇವಾ ಸಮಿತಿ ಸಹಯೋಗದಲ್ಲಿ ಶಾಸಕ ಕೆ.ಶಿವನಗೌಡ ನಾಯಕ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಮೂಲತಃ ಮಾನ್ವಿ ತಾಲ್ಲೂಕಿನ ಕಸನದೊಡ್ಡಿ ಗ್ರಾಮದ ಕೆ.ಶಿವನಗೌಡ ನಾಯಕ ಅವರು ದೇವದುರ್ಗ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ’ ಎಂದರು.

‘ಶಾಸಕ ಕೆ.ಶಿವನಗೌಡ ನಾಯಕ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ಕಾರಣ ಜು.9ರಂದು ಜಿಲ್ಲಾ ಮಟ್ಟದ ಪುರುಷರ ಮುಕ್ತ ಕಬಡ್ಡಿ ಟೂರ್ನಿ, ಜು.10ರಂದು ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಜು.11ರಂದು ಜಿಲ್ಲಾ ಮಟ್ಟದ ವಾಲಿಬಾಲ್ ಟೂರ್ನಿ, ಜು.1ರಿಂದ 12ರವರೆಗೆ ಮಾನ್ವಿ ಹಾಗೂ ಸಿರವಾರ ತಾಲ್ಲೂಕುಗಳ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಯೋಗದಲ್ಲಿ ಉಚಿತವಾಗಿ ಹೃದಯರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡದ ಕಾಯಿಲೆಗಳ ತಪಾಸಣಾ ಶಿಬಿರ, ಜು.14ರಂದು ಮಾನ್ವಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ನೇತ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.

ADVERTISEMENT

‘ಜು.14ರಂದು ಮಾನ್ವಿಯ ಟಿಎಪಿಸಿಎಂಎಸ್ ಆವರಣದಲ್ಲಿ ನಡೆಯುವ ಶಾಸಕ ಕೆ.ಶಿವನಗೌಡ ನಾಯಕ ಅವರ ಅಭಿನಂದನಾ ಸಮಾರಂಭದಲ್ಲಿ ಸಚಿವರಾದ ವಿ.ಸೋಮಣ್ಣ, ಬಿ.ಶ್ರೀರಾಮುಲು, ಸಿ.ಸಿ.ಪಾಟೀಲ, ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಸಂಸದರು, ಶಾಸಕರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು, ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಾರ್ವಜನಿಕರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು’ ಎಂದು ಅವರು ಮನವಿ ಮಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ, ಮುಖಂಡರಾದ ಚಂದ್ರಕಲಾಧರ ಸ್ವಾಮಿ ಭೋಗಾವತಿ, ಉಮಾಕಾಂತ ಸಾಹುಕಾರ ಸೀಕಲ್, ವೀರೇಶ ನಾಯಕ ಬೆಟ್ಟದೂರು, ಕೆ.ನಾಗಲಿಂಗಸ್ವಾಮಿ, ಜಯರಾಜ ಜಡಿಮಳೆ, ಶಿವಕುಮಾರಸ್ವಾಮಿ ಗವಿಗಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.