
ಮಾನ್ವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಕೋನಾಪುರಪೇಟೆಯ ಅಂಬೇಡ್ಕರ್ ನಗರದಲ್ಲಿ ಸ್ಥಳೀಯ ನಿವಾಸಿಗಳು ಸೋಮವಾರ ಧರಣಿ ನಡೆಸಿದರು.
ಉಪವಾಸ ಸತ್ಯಾಗ್ರಹ ನಡೆಸಿದ ಸಾಮಾಜಿಕ ಕಾರ್ಯಕರ್ತ ಗುರುರಾಜ ನಾಗಲಾಪುರ್ ಮಾತನಾಡಿ, ‘ಪಟ್ಟಣದ ಕೋನಾಪುರ ಪೇಟೆ ಅಭಿವೃದ್ದಿಯಲ್ಲಿ ವಂಚಿತವಾಗಿದ್ದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕೂಡ ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಚೀಕಲಪರ್ವಿ ರಸ್ತೆಯಲ್ಲಿ ಪ್ರತಿದಿನ ಭಾರೀ ತೂಕದ ವಾಹನಗಳ ಸಂಚಾರ ದಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ವಾಹನ ದಟ್ಟಣೆ ನಿವಾರಣೆಗಾಗಿ ಬೈಪಾಸ್ ರಸ್ತೆಯನ್ನು ನಿರ್ಮಾಣ ಮಾಡಬೇಕು’ ಎಂದು ಒತ್ತಾಯಿಸಿದರು.
ಕೋನಾಪುರ ಪೇಟೆ ವೃತ್ತದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಬೇಕು. ಪುರಸಭೆ ವತಿಯಿಂದ ಪ್ರತಿ ದಿನ ಶುದ್ದ ಕುಡಿಯುವ ನೀರಿನ ಪೂರೈಕೆಗಾಗಿ ಕ್ರಮ ಕೈಗೊಳ್ಳಬೇಕು. ರಸ್ತೆಯಲ್ಲಿ ಧೂಳು ಬಾರದಂತೆ ಸ್ವಚ್ಚತೆ ಕೈಗೊಳ್ಳಬೇಕು. ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹಾಗೂ ಸಿಬ್ಬಂದಿಗಳ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಧರಣಿನಿರತರು ಒತ್ತಾಯಿಸಿದರು.
ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಧರಣಿ ಸ್ಥಳಕ್ಕೆ ಭೇಟಿ ನೀಡಿ ಚರ್ಚಿಸಿದರು. ಬೇಡಿಕೆಗಳ ಈಡೇರಿಕೆ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ವಾಲ್ಮೀಕಿ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ನಾಯಕ, ವಿಶ್ವನಾಥ ರಾಯಪ್ಪ ವಕೀಲ, ಸುದರ್ಶನ ವಕೀಲ, ಕೆ,ಶಿವುಕುಮಾರ, ಚಂದ್ರು ಜಾನೆಕಲ್, ವೆಂಕಟೇಶ್, ವೀರೇಶ ಬುರಾಂಪುರ, ಮಂಜುನಾಥ ನಾಯಕ ಬೆಳಗಿನ ಪೇಟೆ, ಹನುಮೇಶ ನಾಯಕ, ವೀರೇಶ, ಶಿವಪ್ಪ, ಆನಿಲ್ ಗೌಡ, ರೇಣುಕರಾಜ್ ಧರಣಿಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.