
ಹಣ
ಸಾಂದರ್ಭಿಕ ಚಿತ್ರ
ರಾಯಚೂರು: ರಾಜ್ಯ ಸರ್ಕಾರ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದು, ಈ ಭಾರಿ ಕಲ್ಯಾಣ ಕರ್ನಾಟಕಕ್ಕೆ ₹ 25 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ರಾಯಚೂರು ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ. ಲಕ್ಷ್ಮೀರೆಡ್ಡಿ ಒತ್ತಾಯಿಸಿದರು.
ಕಲ್ಯಾಣ ಕರ್ನಾಟಕದಲ್ಲಿ ಹೊಸ ಬೃಹತ್ ಕೈಗಾರಿಕೆಗಳು ಸ್ಥಾಪನೆ ಹಾಗೂ ಉದ್ಯೋಗ ಸೃಷ್ಟಿಸಲು ವಿಶೇಷ ಒತ್ತು ನೀಡಲು ಮುಂದಾಗಬೇಕು. ಕೈಗಾರಿಕೆಗಳ ಉತ್ತೇಜನವಿಲ್ಲದೇ ಉದ್ಯೋಗ ಸೃಷ್ಟಿಸಲು ಸಾಧ್ಯವಿಲ್ಲ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಶೇ 25ರಷ್ಟು ಅನುದಾನ ಮೀಸಲಿಡಬೇಕು ಎಂದು ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ಆಗ್ರಹಿಸಿದರು.
‘ಮಹತ್ವಾಂಕ್ಷೆ ಜಿಲ್ಲೆಗಳಿಂದ ಗುರುತಿಸಿಕೊಂಡಿರುವ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹತ್ತಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಯಾಗುತ್ತಿದ್ದು, ಮೆಗಾ ಟೆಕ್ಸ್ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರದ ಮೇಲೆ ಒತ್ತಡ ತರಬೇಕಿದೆ. ಕಲ್ಯಾಣ ಕರ್ನಾಟಕದ 42 ಜನ ಶಾಸಕರು, ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಿ, ನಿರುದ್ಯೋಗ ಸಮಸ್ಯೆ ನೀಗಿಸಲು ತರಬೇತಿ, ಉದ್ಯೋಗ ಒದಗಿಸುವ ಕೈಗಾರಿಕೆಗಳ ಸ್ಥಾಪನೆಗೆ ಒತ್ತಾಯ ಮಾಡಬೇಕು’ ಎಂದು ಮನವಿ ಮಾಡಿದರು.
‘ಕೃಷಿ ಆಧಾರಿತ ಕೈಗಾರಿಕೆಗಳು ಸಾಕಷ್ಟು ಕಾರ್ಯನಿರ್ವಹಿಸುತ್ತಿದ್ದು, ಕಡಿಮೆ ದರದಲ್ಲಿ ಕೈಗಾರಿಕೆ ಸಾಲ ಯೋಜನೆ ರೂಪಿಸಬೇಕು’ ಎಂದು ಒತ್ತಾಯಿಸಿದರು.
ವಾಣಿಜ್ಯೋದ್ಯಮ ಸಂಘದ ಮಾಜಿ ಅಧ್ಯಕ್ಷ ನಾಗನಗೌಡ ಹರವಿ, ರಮೇಶ, ನಾರಾಯಣ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.