ADVERTISEMENT

‘ಎಚ್‌ಐವಿ ಸೋಂಕಿತರಿಗೆ ಅಗತ್ಯ ಸೌಲಭ್ಯ ಒದಗಿಸಿ’

ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಸಿಇಒ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 6:00 IST
Last Updated 24 ಜನವರಿ 2026, 6:00 IST
ರಾಯಚೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಮಾತನಾಡಿದರು
ರಾಯಚೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಮಾತನಾಡಿದರು   

ರಾಯಚೂರು: ಎಚ್‌ಐವಿ ಸೋಂಕಿತರ ಗುಣಪಡಿಸಲು ಸರ್ಕಾರವು ಅನೇಕ ಯೋಜನೆ ಹಾಗೂ ಸೌಲಭ್ಯಗಳನ್ನೂ ಕಲ್ಪಿಸುತ್ತಿದೆ. ರೋಗಿಗಳು ಅವುಗಳ ಸದುಪಯೋಗ ಪಡೆದುಕೊಳ್ಳುವಂತಾಗಬೇಕು’ ಎಂದು ಜಿ.ಪಂ ಸಿಇಒ ಈಶ್ವರಕುಮಾರ ಕಾಂದೂ ಹೇಳಿದರು.

ನಗರದ ಜಿ.ಪಂ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಡಿ ನಡೆದ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಆಕಸ್ಮಿಕ ಘಟನೆಗಳಿಂದ ಕೆಲವರು ಎಚ್‌ಐವಿ ಸೋಂಕಿಗೆ ಒಳಗಾಗುತ್ತಾರೆ. ಇದರಿಂದಾಗಿ ಸಮಾಜದಿಂದ ಕಳಂಕ ತಾರತಮ್ಯಕ್ಕೆ ಒಳಗಾಗುವ ವ್ಯಕ್ತಿಗಳ ಸಹಾಯಕ್ಕೆ ನಾವು ಮುಂದಾಗಬೇಕು. ಎಚ್‌ಐವಿ ಸೋಂಕಿಗೆ ಒಳಗಾಗಿರುವವರಿಗೆ ವಿವಿಧ ಇಲಾಖೆಗಳ ಮೂಲಕ ಸಿಗುವ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ತಿಳಿಸಿದರು.

ADVERTISEMENT

‘ಯುವ ಜನಾಂಗಕ್ಕೆ ಸೋಂಕಿನಿಂದ ಉಂಟಾಗುವ ವೈಯಕ್ತಿಕ, ಸಾಮಾಜಿಕ, ಕೌಟುಂಬಿಕ ಸಮಸ್ಯೆಗಳ ಬಗ್ಗೆ ತಿಳಿಸಬೇಕು. ಈಗಿರುವ ಸೋಂಕಿತರಿಗೆ ಎಆರ್‌ಟಿ ಚಿಕಿತ್ಸೆ ವಿಳಂಬವಾಗದಂತೆ, ಅಗತ್ಯವುಳ್ಳವರಿಗೆ ನೆವರೋಪಿನ್ ಚಿಕಿತ್ಸೆ ಕೊಡಬೇಕು. ಲಿಂಗತ್ವ ಅಲ್ಪಸಂಖ್ಯಾತರ, ಲೈಂಗಿಕ ಕಾರ್ಯಕರ್ತರ ಮಾಹಿತಿಯನ್ನು ವೈದ್ಯಕೀಯ ಕಾರಣ ಹೊರತುಪಡಿಸಿ ಗೋಪ್ಯವಾಗಿ ಇಡುವ ಮೂಲಕ ಅವರಿಗೆ ವಸತಿ ಯೋಜನೆಯಡಿ ಮನೆಗಳು, ಸಾಲ ಒದಗಿಸುವಿಕೆ, ಮನಸ್ವಿನಿ, ಮೈತ್ರಿ ಯೋಜನೆಯಡಿ ಮಾಸಾಶನ, ಉದ್ಯೋಗಿನಿ ಯೋಜನೆಯಡಿ ಸ್ವಯಂ ಉದ್ಯೋಗದ ಅರ್ಜಿಗಳನ್ನು ನೀಡಿ ಸೌಲಭ್ಯ ಒದಗಿಸಿ ಮುಖ್ಯವಾಹಿನಿಗೆ ತರುವ ಕೆಲಸವನ್ನು ಮಾಡಬೇಕು‘ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿರಳ ರಕ್ತದ ಗುಂಪು ಕಾಯ್ದಿರಿಸಲು ಸೂಚನೆ:

ಗರ್ಭಿಣಿ, ಬಾಣಂತಿಯರಿಗೆ ತುರ್ತು ಅಗತ್ಯವಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಬ್ಲಡ್ ಬ್ಯಾಂಕ್‌ಗಳಲ್ಲಿ ನೆಗಟಿವ್ ಹಾಗೂ ವಿರಳ ಗುಂಪಿನ ರಕ್ತವನ್ನು ಕನಿಷ್ಠ ಒಂದು ಯುನಿಟ್ ಸಂಗ್ರಹಿಸಿಟ್ಟುಕೊಳ್ಳಬೇಕು. ಅಲ್ಲದೆ ನಿಯಮಿತವಾಗಿ ರಕ್ತದಾನ ಶಿಬಿರಗಳನ್ನು ಸಂಘ ಸಂಸ್ಥೆ, ಪದವಿ ಕಾಲೇಜು, ಉತ್ಸವ, ಜಾತ್ರೆಗಳಲ್ಲಿ ಆಯೋಜಿಸಿ ರಕ್ತದ ಕೊರತೆ ಜಿಲ್ಲೆಯಲ್ಲಿ ಉಂಟಾಗದಂತೆ ನಿಗಾವಹಿಸಬೇಕು ಎಂದು ಸಿಇಒ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನಕುಮಾರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ ಬಡಿಗೇರ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ನಂದಿತಾ ಎಮ್ ಎನ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಮಹ್ಮದ್ ಶಾಕೀರ್ ಮೊಹಿಯುದ್ದೀನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ ಕೆ., ಜಿಲ್ಲಾ ಕಾರಗೃಹದ ಅಧಿಕ್ಷಕಿ ಅನಿತಾ ಹಿರೇಮನಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್ ದಾಸಪ್ಪನವರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.