ರಾಯಚೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ 2024–25ನೇ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಮತ್ತು ಜೋಳವನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಕಾರ್ಯಪಡೆ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ.
ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 20 ಕ್ವಿಂಟಲ್ನಂತೆ ಗರಿಷ್ಠ 150 ಕ್ವಿಂಟಲ್ ಬಿಳಿಜೋಳ ಹಾಗೂ ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಲ್ನಂತೆ ಗರಿಷ್ಠ 50 ಕ್ವಿಂಟಲ್ ಭತ್ತವನ್ನು ರೈತರು ಹೊಂದಿರುವ ಜಮೀನಿಗೆ ಅನುಗುಣವಾಗಿ ಎಫ್ಐಡಿ ಪ್ರಕಾರ ಬಿಳಿಜೋಳ-ಹೈಬ್ರಿಡ್ ಪ್ರತಿ ಕ್ವಿಂಟಲ್ಗೆ ₹3,371, ಬಿಳಿಜೋಳ-ಮಾಲ್ದಂಡಿ ಪ್ರತಿ ಕ್ವಿಂಟಲ್ಗೆ ₹3,421, ಸಾಮಾನ್ಯ ಭತ್ತ ಪ್ರತಿ ಕ್ವಿಂಟಲ್ಗೆ ₹2,300 ಹಾಗೂ ಗ್ರೇಡ್-ಎ ಭತ್ತ ಪ್ರತಿ ಕ್ವಿಂಟಲ್ಗೆ ₹2,320ರಂತೆ ಖರೀದಿಸಲು ಆದೇಶಿಸಲಾಗಿದೆ.
ಬೆಂಬಲ ಯೋಜನೆಯಡಿ ಭತ್ತ ನೀಡ ಬಯಸುವ ರೈತರು ತಮ್ಮ ಹತ್ತಿರದ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಿ ಏಪ್ರಿಲ್ 25ರೊಳಗೆ ಹಾಗೂ ಜೋಳ ಬೆಳೆದ ರೈತರು ಮೇ 31ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ರೈತರಿಂದ ಖರೀದಿ ಪ್ರಕ್ರಿಯೆಯನ್ನು ಮೇ 31ರವರೆಗೂ ಕೈಗೊಳ್ಳಲಾಗುವುದು.
ಕೃಷಿ ಇಲಾಖೆಯವರು ಸಿದ್ಧಪಡಿಸಿದ ಫ್ರೂಟ್ಸ್ ಎಂಬ ತಂತ್ರಾಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೋಂದಾಯಿಸಿಕೊಳ್ಳಲಾಗುವುದು. ಒಂದು ವೇಳೆ ಫ್ರೂಟ್ಸ್ ತಂತ್ರಾಂಶದಲ್ಲಿ ತೊಂದರೆಯಿದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾಂಶದಲ್ಲಿ ಸರಿಪಡಿಸಿಕೊಂಡು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.