ರಾಯಚೂರು: ‘ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ದಿಸೆಯಲ್ಲಿ ಅಧಿಕಾರಿಗಳು ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಕಾಲ-ಕಾಲಕ್ಕೆ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯಗಳ ಪರಿಶೀಲನೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಸೂಚನೆ ನೀಡಿದರು.
ಇಲ್ಲಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು.
‘ಅಂಗನವಾಡಿಯ ಕಾರ್ಯಕರ್ತರ ಹಾಜರಾತಿ, ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಸೇರಿದಂತೆ ಅಲ್ಲಿ ಸರ್ಕಾರದ ಸೌಲಭ್ಯಗಳು ಸರಿಯಾಗಿ ದೊರಕುತ್ತಿವೆಯೇ ಎನ್ನವುದನ್ನು ಪರಿಶೀಲಿಸಬೇಕು. ತೊಡಕುಗಳು ಇದ್ದರೆ ತಕ್ಷಣ ಮೇಲಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು’ ಎಂದು ಹೇಳಿದರು.
‘ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಕ್ರಮಕೈಗೊಳ್ಳಬೇಕು. 14 ರಿಂದ 18 ವರ್ಷದ ಯುವತಿಯರಿಗೆ ಕೌಶಲ ತರಬೇತಿ ನೀಡಿ ಉದ್ಯೋಗ ಅವಕಾಶ ಮಾಡಿದರೆ ಅನುಕೂಲವಾಗಲಿದೆ. ಈ ತರಬೇತಿ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಿ ಗ್ರಾಮೀಣ ನಿರುದ್ಯೋಗ ಯುವತಿಯರಿಗೆ ಉದ್ಯೋಗ ದೊರಕಿಸಿಕೊಡಲು ಪ್ರಯತ್ನಿಸಬೇಕು‘ ಎಂದು ಸಲಹೆ ನೀಡಿದರು.
‘ಬಾಲ್ಯವಿವಾಹ ಮತ್ತು ಪೊಕ್ಸೋ ಅಪರಾಧಗಳು ಕಂಡುಬಂದಲ್ಲಿ ಕ್ರಮಕೈಗೊಳ್ಳಬೇಕು. ಬಾಲ್ಯ ವಿವಾಹ ಮತ್ತು ಪೊಕ್ಸೋ ಪ್ರಕರಣಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು‘ ಎಂದು ಸೂಚನೆ ನೀಡಿದರು.
‘ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರ ಸಹಕಾರ ಪಡೆದು ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು. ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿಯು ಕಡ್ಡಾಯವಾಗಿ ಇರುವಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸಿಇಒ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನಕುಮಾರ ಮಾತನಾಡಿ, ‘ಶಾಲಾ ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಗಳಲ್ಲಿಯೇ ಇರುವುದರಿಂದ ಬಾಲ್ಯ ವಿವಾಹಗಳ ಬಗ್ಗೆ ಪತ್ತೆ ಹಚ್ಚಿ ಕಾರ್ಯಪಡೆಗೆ ಸಕಾಲಕ್ಕೆ ಮಾಹಿತಿ ನೀಡಬೇಕು’ ಎಂದು ಸೂಚನೆ ನೀಡಿದರು.
‘ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳು ಮತ್ತು ಪೋಷಣ್ ಟ್ರ್ಯಾಕರ್ ತಂತ್ರಾಶದಲ್ಲಿ ಫಲಾನುಭವಿಗಳ ಆಧಾರ್ ಸೀಡಿಂಗ್ 2025ರ ಜುಲೈ ಅಂತ್ಯಕ್ಕೆ ಒಟ್ಟು 2,42,482 ಫಲಾನುಭವಿಗಳಿದ್ದು, 2,42,457 ಆಧಾರ್ ಪರಿಶೀಲನೆ ಮಾಡಲಾಗಿದೆ. ಇನ್ನೂ 25 ಜನರ ಪರಿಶೀಲನೆ ಬಾಕಿ ಉಳಿಸಲಾಗಿದೆ’ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪೋಷಣೆ ಅಭಿಯಾನವನ್ನು ಸರಿಯಾಗಿ ಅನುಷ್ಠಾನಗೊಳಿಸುವ ದಿಸೆಯಲ್ಲಿ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಪೋಷಣ್ ಟ್ರ್ಯಾಕರ್ ತಂತ್ರಾಶದಲ್ಲಿ ಮಾಹಿತಿ ಅಳವಡಿಸಬೇಕುಈಶ್ವರಕುಮಾರ ಕಾಂದೂ ಜಿಲ್ಲಾ ಪಂಚಾಯಿತಿ ಸಿಇಒ
ಪೋಷಣೆ ಅಭಿಯಾನ
ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿ: ಜಿಲ್ಲೆಯಲ್ಲಿ ಪೋಷಣಾ ಅಭಿಯಾನ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ವಿತರಿಸಲಾದ ಅಭಿವೃದ್ಧಿ ಮೇಲ್ವಿಚಾರಣೆ ಮಾಪನಗಳ ಮಾಹಿತಿ ನೀಡುವಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು ಕಾಂದೂ ಸೂಚಿಸಿದರು.
‘ಪೋಷಣ್ ಟ್ರ್ಯಾಕರ್ನಲ್ಲಿ ಫಲಾನುಭವಿಗಳನ್ನು 0-6 ವರ್ಷದ ಮಕ್ಕಳ ತೂಕ ಮತ್ತು ಎತ್ತರ ದಾಖಲು ಮಾಡಬೇಕು. ಹದಿಹರೆಯದ ಕಿಶೋರಿಯರ ತೂಕ ಮತ್ತು ಎತ್ತರ ಅಳವಡಿಸಿರುವ ಮಾಹಿತಿ ಸಂಗ್ರಹಿಸಬೇಕು’ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆ ಬೇಟಿ ಬಚಾವೋ ಬೇಟಿ ಪಢಾವೋ ಅಭಿಯಾನ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಶಕ್ತಿ ಸದನ ಯೋಜನೆ ಶಿಶು ಪಾಲನಾ ಕೇಂದ್ರಗಳು ಬಾಲಕಿಯರ ವಸತಿ ನಿಲಯ ಯೋಜನೆ ಸಾಂತ್ವನ ಯೋಜನೆ ಸ್ತ್ರೀ ಶಕ್ತಿ ಯೋಜನೆ ಸೇರಿದಂತೆ ಇತರೆ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ರಾಯಚೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಡಿ.ಬಡಿಗೇರ ಮಿಷನ್ ಶಕ್ತಿ ಯೋಜನೆಯ ನಿರ್ವಾಹಕ ಗಿರಿಜಾ ಸಖಿ ಒನ್ ಕೇಂದ್ರದ ಸಿಬ್ಬಂದಿ ಭಾಗ್ಯವತಿ ಒ.ಎಸ್.ಸಿ ಕಾನೂನು ಸಲಹೆಗಾರ್ತಿ ಪಾರ್ವತಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.