ರಾಯಚೂರು: ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಇಲ್ಲಿಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
‘ಜನವರಿಯಲ್ಲಿ ಬೆಂಗಳೂರಿನಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಾಗ, ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ಕೊಟ್ಟಿತ್ತು. ಆದರೆ, ಈವರೆಗೂ ಅದು ಈಡೇರಿಲ್ಲ. ಹಾಗಾಗಿ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ಹೊರಡಿಸಿದ ಆದೇಶವನ್ನು ತಾವೇ ಜಾರಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಪ್ರತಿಯೊಂದು ಜವಾಬ್ದಾರಿ ಹೊತ್ತುಕೊಂಡು ಕೆಲಸ ಮಾಡುತ್ತಿದ್ದಾರೆ. ಆದರೂ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಈ ಕೂಡಲೇ ಆದೇಶ ಜಾರಿ ಮಾಡದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಸಿದರು.
‘20 ಆಶಾಗಳಿಗೆ ಒಬ್ಬರಂತೆ ಒಬ್ಬರನ್ನು ಕಳೆದ 10 ವರ್ಷಗಳಿಂದ ಕೆಲಸಕ್ಕೆ ಪಡೆದುಕೊಳ್ಳಲಾಗಿದೆ. ಇಂಥ 2,000 ಮಂದಿಯನ್ನು ದಿಢೀರ್ ತೆಗೆದು ಹಾಕಲಾಗಿದೆ. ಸೂಕ್ತ ವೇತನದೊಂದಿಗೆ ಆಶಾ ಸುಗಮಕಾರರನ್ನು ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.
‘ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯನ್ನು ಅವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡುವುದನ್ನು ಕೈಬಿಡಬೇಕು. ಸೇವಾನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗೂ ₹1,000 ಪ್ರೋತ್ಸಾಹಧನ ಕೊಡಬೇಕು’ ಎಂದು ಆಗ್ರಹಿಸಿದರು.
ನಂತರ ಪ್ರತಿಭಟನಕಾರರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಭಜಂತ್ರಿ ಅವರಿಗೆ ಮನವಿಪತ್ರ ಸಲ್ಲಿಸಿದರು.
ಪ್ರಮುಖರಾದ ಚಾಮರಸ ಮಾಲಿಪಾಟೀಲ, ಜಾನ್ವೆಸ್ಲಿ, ಶಾರದಾ, ಸರೋಜಾ ಗೋನಾಳ್, ಗೌರಮ್ಮ, ಮಲ್ಲಮ್ಮ, ಪ್ರಭಾವತಿ, ಲಕ್ಷ್ಮಿ, ಈರಮ್ಮ, ರಾಧಾ, ಹುಲಿನಾಯಕ, ಬಸವರಾಜ ಬಿ., ಮಹೇಶ, ಅಣ್ಣಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಏ.1ರಿಂದ ಅನ್ವಯವಾಗುವಂತೆ ಗೌರವಧನ ₹10 ಸಾವಿರಕ್ಕೆ ಹೆಚ್ಚಿಸಿ ಆಶಾ ಸುಗಮಕಾರರನ್ನು ಮುಂದುವರಿಸಲು ಒತ್ತಾಯ ಅಂಗನವಾಡಿ, ಬಿಸಿಯೂಟ ನೌಕರರಂತೆ ₹1,000 ಪ್ರೋತ್ಸಾಹಧನ ಕೊಡಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.