ADVERTISEMENT

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯ: ರಾಯಚೂರು ಬಂದ್

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2022, 5:42 IST
Last Updated 10 ಫೆಬ್ರುವರಿ 2022, 5:42 IST
ರಾಯಚೂರು ಬಂದ್
ರಾಯಚೂರು ಬಂದ್   

ರಾಯಚೂರು: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟವು ಕರೆ ನೀಡಿದ್ದ ರಾಯಚೂರು ಬಂದ್‌ಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ.

ತರಕಾರಿ ವ್ಯಾಪಾರಿಗಳ ಸಂಘ, ಕನ್ನಡಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ನಿತ್ಯ ಜನಜಂಗುಳಿ ಇರುತ್ತಿದ್ದ ರಾಯಚೂರಿನ ತರಕಾರಿ ಮಾರುಕಟ್ಟೆ, ಕೇಂದ್ರ ಬಸ್ ನಿಲ್ದಾಣ, ಸೂಪರ್ ಮಾರ್ಕೆಟ್‌ಗಳು ಸ್ತಬ್ಧಗೊಂಡಿವೆ. ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಬಹುತೇಕ ವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಕೊಂಡಿದ್ದಾರೆ.

ADVERTISEMENT

ಬಂದ್ ಕರೆ ಹಿನ್ನೆಲೆಯಲ್ಲಿ ಬಹುತೇಕ ಖಾಸಗಿ ಶಾಲೆಗಳು ರಜೆ ಘೋಷಿಸಿವೆ.

ಗಣರಾಜ್ಯೋತ್ಸವ ದಿನದಂದು ಜಿಲ್ಲಾ ನ್ಯಾಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆರವುಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟವು ರಾಯಚೂರು ತಾಲ್ಲೂಕಿನಾದ್ಯಂತ ಬಂದ್‌ಗೆ ಕರೆ ನೀಡಿದೆ.

ಈ ಸಂಬಂಧ ಜನವರಿ 26 ರಿಂದ ಧರಣಿ ಮುಂದುವರಿಸಲಾಗಿದ್ದು, ಜನವರಿ 28 ರಂದು ರಾಯಚೂರು ಬಂದ್ ಮಾಡಲಾಗಿತ್ತು. ಆನಂತರ ವಿವಿಧ ತಾಲ್ಲೂಕುಗಳಲ್ಲಿಯೂ ಬಂದ್ ಮಾಡಲಾಗಿತ್ತು.

ನ್ಯಾಯಾಧೀಶರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆಗಳು ನಿರಂತರವಾಗಿ ನಡೆಯಲಿವೆ ಎಂದು ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.