
ರಾಯಚೂರು: ರಾಯಚೂರಿನ ರಾಜೀವ್ ಗಾಂಧಿ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಕಿದ್ವಾಯಿ ಫೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕದ ₹20 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಟ್ಟಡ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಚಾಲನೆ ನೀಡಿದರು.
ಜಿಲ್ಲಾಡಳಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ರಿಮ್ಸ್ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ₹ 4.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿನಿಯರ ವಸತಿ ನಿಲಯ ಕಟ್ಟಡವನ್ನು ಸಹ ಇದೇ ವೇಳೆಗೆ ಉದ್ಘಾಟಿಸಿದರು.
ಸಚಿವ ಎನ್.ಎಸ್. ಬೋಸರಾಜು ಮಾತನಾಡಿ, ‘ ಡಾ.ಶರಣಪ್ರಕಾಶ ಪಾಟೀಲ ಅವರು ವೈದ್ಯಕೀಯ ಇಲಾಖೆಯ ಸಚಿವರಾಗಿದ್ದರಿಂದಾಗಿ ನಮ್ಮಲ್ಲಿ ಈ ಹೊಸ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗುತ್ತಿದೆ’ ಎಂದು ತಿಳಿಸಿದರು.
ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ರಾಯಚೂರಿನ ಒಪೆಕ್ ಆಸ್ಪತ್ರೆ ಎಲ್ಲ ವಿಭಾಗಗಳು ಉತ್ತಮವಾಗಿದೆ ಕಾರ್ಯನಿರ್ವಹಿಸುತ್ತಿವೆ. ಇದರಿಂದಾಗಿ ಜಿಲ್ಲೆಯ ಜನತೆಗೆ ಸಾಕಷ್ಟು ಅನುಕೂಲವಾಗಿದೆ’ ಎಂದರು.
ರಾಯಚೂರಿಗೆ ಟ್ರಾಮಾ ಕೇರ್ ಸೆಂಟರ್ ನಿರ್ಮಾಣ ಹಾಗೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣದ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು. ಈಗಾಗಲೇ ಟ್ರಾಮಾ ಸೆಂಟರ್ ನಿರ್ಮಾಣವಾಗಿದೆ. ಇದೀಗ ಮೊದಲನೇ ಹಂತದಲ್ಲಿ ₹20 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈಗಾಗಲೇ ಒಪೆಕ್ ಆಸ್ಪತ್ರೆ ಆವರಣದಲ್ಲಿನ ಎಲ್ಲ ರಸ್ತೆಗಳನ್ನು ಸರಿಪಡಿಸಲಾಗಿದೆ’ ಎಂದು ತಿಳಿಸಿದರು.
‘ಅಜಿಂ ಪ್ರೇಮಜಿ ಅವರ ಸಹಯೋಗದಲ್ಲಿ ಒಂದು ವಿಶೇಷ ಆಸ್ಪತ್ರೆಯನ್ನು ಮುಂದಿನ ಮೂರು ವರ್ಷದೊಳಗೆ ನಿರ್ಮಾಣ ಮಾಡಲು ಯೋಜಿಸಲಾಗಿದೆ. ರಾಜ್ಯ ಸರ್ಕಾರವು ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದೆ. ಜನತೆ ಆರೋಗ್ಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.
ಶಾಸಕರಾದ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ, ಮುಖಂಡರಾದ ಪವನ ಕಿಶೋರ ಪಾಟೀಲ, ಜಿಲ್ಲಾಧಿಕಾರಿ ನಿತೀಶ್ ಕೆ., ಎಸ್ಪಿ ಅರುಣಾಂಕ್ಷು ಗಿರಿ, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ನಿರ್ದೇಶಕ ಡಾ.ನವೀನ್ ಟಿ., ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಿಮ್ಸ್ ನಿರ್ದೇಶಕ ಡಾ.ರಮೇಶ ಬಿ ಎಚ್., ರಾಜೀವ್ ಗಾಂಧಿ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕ ಡಾ.ರಮೇಶ ಸಿ ಸಾಗರ, ರಿಮ್ಸ್ ನ ಮುಖ್ಯ ಆಡಳಿತಾಧಿಕಾರಿ ಡಾ.ಗುರುಸಿದ್ದಯ್ಯ, ಆರ್ಥಿಕ ಅಧಿಕಾರಿ ಚನ್ನಮ್ಮ, ಡಿಎಚ್ಓ ಡಾ.ಸುರೇಂದ್ರಬಾಬು ಉಪಸ್ಥಿತರಿದ್ದರು.
ದಂಡಪ್ಪ ಬಿರಾದಾರ ನಿರೂಪಿಸಿದರು. ಡಾ.ಡಿ.ಮಂಡೋಲಿಕರ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.