ರಾಯಚೂರು: ವೈದ್ಯಕೀಯ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ವಿರುದ್ಧ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಕಾಂಗ್ರೆಸ್ ಶಾಸಕರೇ ಹರಿಹಾಯ್ದರು.
‘ಜಿಲ್ಲೆಗೆ ಇಬ್ಬರು ಸಚಿವರಿದ್ದರೂ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಅಧಿಕಾರಿಗಳು ಸಭೆಗೆ ಕರೆಯದೇ ಶಾಸಕರನ್ನು ಅವಮಾನಿಸುತ್ತಿದ್ದಾರೆ. ಅಕ್ರಮ ವ್ಯವಹಾರಗಳು ಎಗ್ಗಿಲ್ಲದೇ ನಡೆದಿವೆ. ಪೊಲೀಸ್ ಗೂಂಡಾಗಿರಿ ಹೆಚ್ಚಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಜಿಲ್ಲಾ ಉಸ್ತುವಾರಿ ಸಚಿವರು ಶಿಷ್ಟಾಚಾರಕ್ಕಾಗಿ ಸಭೆ ನಡೆಸಿ ಹೋಗುವುದರಿಂದ ಅಭಿವೃದ್ಧಿ ಕಾರ್ಯಗಳು ನಡೆಯುವುದಿಲ್ಲ’ ಎಂದು ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರುವಿಹಾಳ ಅವರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ, ಎ.ವಸಂತಕುಮಾರ, ಶರಣಗೌಡ ಪಾಟೀಲ ಬಯ್ಯಾಪುರ ಅವರೂ ತುರುವಿಹಾಳ ಅವರ ಆಕ್ರೋಶಕ್ಕೆ ದನಿಗೂಡಿಸಿದರು.
ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಸಚಿವರ ಬೆಂಬಲಕ್ಕೆ ನಿಂತರು. ದದ್ದಲ್ ಒಂದು ಹಂತದಲ್ಲಿ ಏಕವಚನ ಬಳಸಿದಾಗ ಬಸನಗೌಡ ಬಾದರ್ಲಿ ಅವರೂ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು. ಸ್ವಪಕ್ಷದ ಶಾಸಕರೇ ಸಭೆಯಲ್ಲಿ ಗರಂ ಆದ್ದರಿಂದ ಸಚಿವ ಶರಣಪ್ರಕಾಶ ಪಾಟೀಲ ತೀವ್ರ ಮುಜುಗರಕ್ಕೆ ಒಳಗಾಗಬೇಕಾಯಿತು.
ಸಭೆಯಲ್ಲಿ ರಮ್ಮಿ ಆಡಿದ ಅಧಿಕಾರಿ!
ಕೆಡಿಪಿ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಸಚಿವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರೆ ಇತ್ತ ಪ್ರಾದೇಶಿಕ ಅರಣ್ಯ ಇಲಾಖೆಯ ಡಿಸಿಎಫ್ ಪ್ರವೀಣ ಅವರು ಬಹಳ ಹೊತ್ತಿನವರೆಗೂ ಮೊಬೈಲ್ನಲ್ಲಿ ‘ರಮ್ಮಿ’ ಆಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ‘ರಮ್ಮಿ’ ಆಡಿದ ವಿಷಯ ಸಚಿವರ ಗಮನಕ್ಕೆ ಬರುತ್ತಿದ್ದಂತೆಯೇ ಸಭೆಯಿಂದ ಡಿಸಿಎಫ್ ಅವರನ್ನು ಹೊರಗೆ ಕಳುಹಿಸಿದರು. ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.
ಕೆಡಿಪಿ ಸಭೆಯಲ್ಲಿ ರಮ್ಮಿ ಆಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚನೆ ನೀಡಿದ್ದೇನೆಈಶ್ವರ ಬಿ. ಖಂಡ್ರೆ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.