ADVERTISEMENT

ಮರಳು ದಂಧೆಗೆ ಸಹಕರಿಸುವ ಅಧಿಕಾರಿಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 6:25 IST
Last Updated 31 ಜನವರಿ 2026, 6:25 IST
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಮಾತನಾಡಿದರು
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಮಾತನಾಡಿದರು   

ರಾಯಚೂರು: ‘ಜಿಲ್ಲೆಯಲ್ಲಿ ನಡೆಯುತ್ತಿರುವ ಮರಳು ಅಕ್ರಮ ಸಾಗಣೆ ತಕ್ಷಣ ನಿಲ್ಲಬೇಕು. ಮರಳು ಅಕ್ರಮ ಸಾಗಣೆ ಕಂಡುಬಂದರೆ ಎಷ್ಟೇ ಪ್ರಭಾವಿಗಳಾಗಿರಲಿ ಹಾಗೂ ಯಾರೇ ಇರಲಿ ಮುಲಾಜಿಲ್ಲದೆ ಕ್ರಮ ಕ್ರೈಗೊಳ್ಳಲಾಗುವುದು’ ಎಂದು ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್ ಕೆ. ಎಚ್ಚರಿಕೆ ನೀಡಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸ್ ನೀಡಿಕೆ ಮತ್ತು ನಿಯಂತ್ರಣ ಪ್ರಾಧಿಕಾರದ ಸಮಿತಿಯ ಸಭೆಯಲ್ಲಿ ಮಾತನಾಡಿದರು.

‘ದೇವದುರ್ಗ, ಮಾನ್ವಿ ಇನ್ನಿತರ ಕಡೆ ಮರಳು ಅಕ್ರಮ ಸಾಗಣೆ ಅವ್ಯಾಹತವಾಗಿ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ಕ್ರಮ ವಹಿಸಬೇಕು ಎನ್ನುವ ವಿಷಯವು ಕೆಡಿಪಿ ಸಭೆ ಮತ್ತು ಇನ್ನಿತರ ಸಭೆಗಳಲ್ಲಿ ಮತ್ತೆ ಮತ್ತೆ ಚರ್ಚೆಗೆ ಬರುತ್ತಿದೆ. ಈ ವಿಷಯವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ’ ಎಂದು ತಿಳಿಸಿದರು.

ADVERTISEMENT

‘ಅಕ್ರಮದಲ್ಲಿ ಯಾವುದೇ ಹಂತದ ಅಧಿಕಾರಿ ಭಾಗಿಯಾಗಿರುವುದು ಕಂಡುಬಂದರೆ ಅಮಾನತುಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಪ್ರಕರಣವು ಗಂಭೀರವಾಗಿದ್ದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆಯೇ ಎಫ್‌ಐಆರ್ ದಾಖಲಿಸಿ ಶಾಶ್ವತವಾಗಿ ಮನೆಗೆ ಕಳುಹಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಮಾತನಾಡಿ,‘ಉಪ ಖನಿಜ ಸಾಗಣೆ ವಾಹನಗಳಿಗೆ ಜಿಪಿಎಸ್ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಜಿಲ್ಲೆಯಲ್ಲಿ ಹಲವು ವಾಹನಗಳು ನಂಬರ್ ಪ್ಲೇಟ್, ಜಿಪಿಎಸ್ ನೋಂದಣಿ ಇಲ್ಲದೆ ಅನಧಿಕೃತವಾಗಿ ಉಪ ಖನಿಜ ಸಾಗಣೆ ಮಾಡುತ್ತಿವೆ. ಈ ಬಗ್ಗೆ ದೂರುಗಳನ್ನು ದಾಖಲಿಸಬೇಕು’ ಎಂದು ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ, ಉಪ ವಿಭಾಗಾಧಿಕಾರಿಗಳಾದ ಬಸವಣೆಪ್ಪ ಕಲಶೆಟ್ಟಿ, ಹಂಪಣ್ಣ ಸಜ್ಜನ, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಇಒಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಮುತ್ತಣ್ಣ ಹಾಜರಿದ್ದರು.

ಅಧಿಕಾರಿಗಳು ಸಿಸಿಟಿವಿ ಕ್ಯಾಮೆರಾ ರೆಕಾರ್ಡ್ ಇಟ್ಟುಕೊಳ್ಳಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಿಲ್ಲ ಎಂದು ಯಾವುದೇ ಕಾರಣಕ್ಕೂ ಸಬೂಬು ಹೇಳುವಂತಿಲ್ಲ.
– ನಿತೀಶ್ ಕೆ., ಜಿಲ್ಲಾಧಿಕಾರಿ

ವಿಶೇಷ ಕಾರ್ಯಾಚರಣೆಗೆ ಸೂಚನೆ

ದೇವದುರ್ಗ ತಾಲ್ಲೂಕಿನಲ್ಲಿ ವಾರಗಳ ಕಾಲ ವಿಶೇಷ ಕಾರ್ಯಾಚರಣೆ ನಡೆಸಬೇಕು. ದೇವದುರ್ಗ ಮತ್ತು ಮಾನವಿಯಲ್ಲಿ ಆರ್‌ಟಿಒ ಅಧಿಕಾರಿಗಳು ವಿಶೇಷ ಅಭಿಯಾನ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

‘ನಂಬರ್ ಪ್ಲೇಟ್ ಇಲ್ಲದೇ ಮಣ್ಣು ತುಂಬಿಕೊಂಡು ಓಡಾಡುವ ಟಿಪ್ಪರ್ ಟ್ರ್ಯಾಕ್ಟರ್‌ಗಳ ಮೇಲೆ ಕಣ್ಣಿಟ್ಟು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ದಾಳಿ ನಡೆಸಿ ಅಂತಹ ವಾಹನಗಳನ್ನು ಜಪ್ತಿ ಮಾಡಬೇಕು. ಅಧಿಕ ಪ್ರಮಾಣದಲ್ಲಿ ದಂಡ ವಿಧಿಸಿ ಬಿಸಿ ಮುಟ್ಟಿಸಬೇಕು. ಜಪ್ತಿ ಮಾಡಿ ಸುಮ್ಮನೆ ಬಿಡಬಾರದು’ ಎಂದು ಖಡಕ್‌ ಸೂಚನೆ ನೀಡಿದರು.

ಚೆಕ್‌ಪೋಸ್ಟ್ ಸ್ಥಾಪನೆಗೆ ಸೂಚನೆ

ದೇವದುರ್ಗ ಜಾಲಹಳ್ಳಿ ಗಬ್ಬೂರು ಸಿರವಾರ ಲಿಂಗಸೂರು ಮಾನ್ವಿ ಸಿಂಧನೂರು ತಾಲ್ಲೂಕಿನ ವಿವಿಧೆಡೆ ಕೂಡಲೇ ಚೆಕ್‌ಪೋಸ್ಟ್ ಸ್ಥಾಪಿಸಬೇಕು. ಸಿಬ್ಬಂದಿಯಿಂದ ಮೊಬೈಲ್‌ ಸಂದೇಶಗಳು ರವಾನೆಯಾಗುತ್ತಿದ್ದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.

‘ತಂಡವಾಗಿ ಕೆಲಸ ಮಾಡಿ’

ಪೊಲೀಸ್ ಸೇರಿದಂತೆ ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು ತಂಡವಾಗಿ ಕೆಲಸ ಮಾಡಬೇಕು. ರಾತ್ರಿ 9 ಗಂಟೆಯಿಂದ ಬೆಳಗಿನ 7 ಗಂಟೆವರೆಗಿನ ಅವಧಿಯಲ್ಲಿ ವಿಶೇಷ ನಿಗಾವಹಿಸಬೇಕು. ಒಂದೇ ವಾಹನಕ್ಕೆ ಅನುಮತಿ ಪಡೆದು ಒಂದೇ ನೇಮ್ ಪ್ಲೇಟ್ ಮೇಲೆ ನಾಲ್ಕಾರು ಗಾಡಿ ಓಡಿಸುವ ಜಾಲದ ಬಗ್ಗೆ ಗಮನ ಹರಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.