
ಕವಿತಾಳ: ಸಮೀಪದ ಬಾಗಲವಾಡ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಮಹಿಳೆಯರು ಬುಧವಾರ ಪ್ರತಿಭಟನೆ ನಡೆಸಿದರು.
‘ಹಿರೇಬಾದರದಿನ್ನಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿದ್ದ ಶೌಚಾಲಯ ತೆರವುಗೊಳಿಸಿದ ಕಾರಣ ಸಮಸ್ಯೆ ಉಂಟಾಗಿದೆ. ಈ ಕುರಿತು ಮಾಹಿತಿ ನೀಡಿದ್ದರೂ ಸ್ಥಳೀಯ ಆಡಳಿತ ಗಮನಹರಿಸುತ್ತಿಲ್ಲ’ ಎಂದು ಮಹಿಳೆಯರು ವಾಹನ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಆಗಮಿಸಿದ ಸಿರವಾರ ತಾಲ್ಲೂಕು ಪಂಚಾಯಿತಿ ಇಒ ಶಶಿಧರ ಸ್ವಾಮಿ ಮಾತನಾಡಿ,‘ಸ್ವಚ್ಛ ಭಾರತ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವೈಯಕ್ತಿಕ ಶೌಚಾಲಯ ನಿರ್ಮಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಅವಕಾಶವಿಲ್ಲ. ಅನಿವಾರ್ಯ ಇದ್ದಲ್ಲಿ ಸರ್ಕಾರಿ ಜಮೀನು ಲಭ್ಯತೆ ಕುರಿತು ತಹಶೀಲ್ದಾರರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
ಅಮರಮ್ಮ ದ್ಯಾವಣ್ಣವರ್, ಈರಮ್ಮ ಗೊರವರು, ಹಂಪಮ್ಮ, ಮಲ್ಲಿಕಾರ್ಜುನಮ್ಮ, ದೇವಮ್ಮ ಮತ್ತು ದ್ಯಾವಮ್ಮ ಸೇರಿದಂತೆ ಹಲವು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.