ADVERTISEMENT

ರಾಯಚೂರು: ಮಳೆ– ಜಿಲ್ಲಾಧಿಕಾರಿಯಿಂದ ತುರ್ತುಸಭೆ, ವಿಡಿಯೊ ಸಂವಾದ

ಬೆಳೆ, ಮನೆ ಹಾನಿ ಸಮೀಕ್ಷೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 14:52 IST
Last Updated 28 ಸೆಪ್ಟೆಂಬರ್ 2025, 14:52 IST
<div class="paragraphs"><p>ರಾಯಚೂರು: ಮಳೆ– ಜಿಲ್ಲಾಧಿಕಾರಿಯಿಂದ ತುರ್ತುಸಭೆ, ವಿಡಿಯೊ ಸಂವಾದ</p></div>

ರಾಯಚೂರು: ಮಳೆ– ಜಿಲ್ಲಾಧಿಕಾರಿಯಿಂದ ತುರ್ತುಸಭೆ, ವಿಡಿಯೊ ಸಂವಾದ

   

ರಾಯಚೂರು: ‘ಭಾರಿ ಮಳೆಯಿಂದಾಗಿ ಜಿಲ್ಲೆಯ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಾನಿಗೊಳಗಾದ ರೈತರಿಗೆ ತಕ್ಷಣ ಸ್ಪಂದಿಸುವ ನಿಟ್ಟಿನಲ್ಲಿ ಬೆಳೆಹಾನಿ ಸಮೀಕ್ಷೆಯ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್ ಕೆ. ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲೆ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಲು ಮತ್ತು ಬೆಳೆ ಹಾನಿ ಸಮೀಕ್ಷೆ ಸಂಬಂಧ ಚರ್ಚಿಸಲು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಹಾಗೂ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.

ADVERTISEMENT

‘ಸೆ.26 ಮತ್ತು ಸೆ.27ರಂದು ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿತ್ತು. ಅದರಂತೆ ನಾಲ್ಕು ಜಿಲ್ಲೆಯ ಬಹುತೇಕ ಕಡೆ ವಿಪರೀತವಾಗಿ ಮಳೆ ಸುರಿದಿದೆ ಎಂದು ಹೇಳಿದರು.

‘ಬೆಳೆಹಾನಿ ಸಮೀಕ್ಷೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದ್ಧಾರೆ. ರೈತರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ, ಹಾನಿಯಾದ ಬೆಳೆಗೆ ನ್ಯಾಯಯುತವಾಗಿ ಪರಿಹಾರ ಸಿಗುವ ಹಾಗೆ ಅಧಿಕಾರಿಗಳು ಸಮೀಕ್ಷೆ ನಡೆಸಬೇಕು. ಹತ್ತಿ, ಭತ್ತ, ತೊಗರಿ, ಜೋಳ ಸೇರಿದಂತೆ ಈಗ ಬಿತ್ತನೆಯಾದ ಎಲ್ಲ ಬೆಳೆಗಳ ಹಾನಿಯ ಸಮೀಕ್ಷೆ ನಡೆಯಬೇಕು‘ ಎಂದರು.

‘ತೋಟಗಾರಿಕಾ ಬೆಳೆಹಾನಿಯ ಸಮೀಕ್ಷೆ ಕೂಡ ನಡೆಯಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ಬೇರೆ ಬೇರೆ ಇಲಾಖೆಗಳು ಸಮನ್ವಯ ಸಾಧಿಸಿ ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಬೇಕು’ ಎಂದು ಸೂಚನೆ ನೀಡಿದರು.

ಜಂಟಿ ಸಮೀಕ್ಷೆಗೆ ಸೂಚನೆ: ಮಳೆಯಿಂದಾಗಿ ಜಾನುವಾರು-ಜೀವಹಾನಿ ಸಮೀಕ್ಷೆ, ಮನೆ ಹಾನಿ ಸಮೀಕ್ಷೆ ಕೂಡ ಜತೆ ಜತೆಯಾಗಿ ನಡೆಯಬೇಕು. ಜಾನುವಾರು-ಜೀವಹಾನಿ ಹಾಗೂ ಮನೆ ಹಾನಿಗೆ ಕಾಲಮಿತಿಯೊಳಗಡೆ ಪರಿಹಾರ ಸಿಗುವಂತೆ ತುರ್ತು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಇಒಗಳಿಗೆ ಸೂಚನೆ: ‘ಕೃಷಿ, ತೋಟಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಸಮನ್ವಯ ಸಾಧಿಸಿ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಬೇಕು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು, ಎಲ್ಲ ಪಿಡಿಒಗಳ ಮೇಲೆ ಸೂಕ್ತ ಮೇಲ್ವಿಚಾರಣೆ ನಡೆಸಿ ಗ್ರಾಮೀಣ ಪ್ರದೇಶದಲ್ಲಿ ಜನತೆಗೆ ಸ್ಪಂದನೆ ಸಿಗುವ ಹಾಗೆ ಕ್ರಮ ವಹಿಸಬೇಕು’ ಎಂದರು.

‘ನಾಲ್ಕು ದಿನಗಳ ಅವಧಿಯಲ್ಲಿ ರಾಯಚೂರು ಜಿಲ್ಲೆಯ ವಾತಾವರಣ ಬದಲಾಗಿದೆ. ಮಲೆನಾಡಿನ ರೀತಿಯಲ್ಲಿ ವಾತಾವರಣ ಕಾಣುತ್ತಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿದ್ದು ಕಾರ್ಯ ನಿರ್ವಹಿಸಬೇಕು. ಜನರ ಕರೆಗಳನ್ನು ಸ್ವೀಕರಿಸಿ ಸ್ಪಂದನೆ ನೀಡಬೇಕು’ ಎಂದು ತಿಳಿಸಿದರು.

‘ಮಳೆಯಿಂದಾಗಿ ಜಮೀನಿನಲ್ಲಿ ನೀರು ನಿಂತಿರುವುದು ಕಾಣುತ್ತಿದೆ. ಕೆಲವು ಕಡೆಗಳಲ್ಲಿ ಜಮೀನುಗಳಲ್ಲಿನ ವಿದ್ಯುತ್ ಕಂಬಗಳು ಬಾಗಿವೆ. ಮಳೆಗಾಳಿಯಿಂದಾಗಿ ಅಲ್ಲಲ್ಲಿ ವಿದ್ಯುತ್ ತಂತಿಗಳು ಗಿಡಮರಗಳ ಮಧ್ಯೆ ಸಿಲುಕುವ ಸಾಧ್ಯತೆ ಇರುತ್ತದೆ. ಹೀಗಾಗಿ ಜೆಸ್ಕಾಂ ಅಧಿಕಾರಿಗಳು, ಅವಘಡಗಳು ಸಂಭವಿಸದಂತೆ ಮುಂಜಾಗ್ರತೆ ವಹಿಸಬೇಕು. ಎಲ್ಲಾ ತಾಲೂಕುಗಳಲ್ಲಿ ಸಂಚಾರ ನಡೆಸಿ ಪರಿಶೀಲಿಸಬೇಕು’ ಎಂದು ತಿಳಿಸಿದರು.

ಅನೇಕ ವರ್ಷಗಳ ನಂತರ ರಾಯಚೂರ ಜಿಲ್ಲೆಯಲ್ಲಿ ದಾಖಲೆಯ ರೀತಿ ಮಳೆ ಬಿದ್ದಿದೆ. ತೀವ್ರ ಮಳೆ ಸಂದರ್ಭದಲ್ಲಿ ಅಧಿಕಾರಿಗಳು, ಸಿಬ್ಬಂದಿ ಸ್ಪಂದನೆ ನೀಡುತ್ತಿಲ್ಲ ಎಂದು ದೂರುಗಳು ಬಂದಲ್ಲಿ, ಅಂತಹ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತು ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ, ಉ‍ಪ ವಿಭಾಗಾಧಿಕಾರಿ ಗಜಾನನ ಬಾಳೆ, ತಹಶೀಲ್ದಾರ್ ಸುರೇಶ ವರ್ಮಾ, ಕೃಷಿ, ತೋಟಗಾರಿಕೆ, ಪಶುಪಾಲನೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.