
ರಾಯಚೂರು: ‘ದೇಶದಲ್ಲಿ ಪ್ರತಿನಿತ್ಯ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಜಾಗೃತಿ ಹೊಂದುವ ಅಗತ್ಯವಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಾರುತಿ ಬಾಗಡೆ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ರೋಟರಿ ಕ್ಲಬ್, ರೊಟರಿ ಕ್ಲಬ್ ಕೃಷ್ಣ ತುಂಗೆ ಮತ್ತು ಮಾನವ ಹಕ್ಕುಗಳು ಹಾಗೂ ಭ್ರಷ್ಟಚಾರ ವಿರೋಧಿ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಹೆಲ್ಮೆಟ್ ರಹಿತ, ಕುಡಿದ ಮತ್ತಿನಲ್ಲಿ ವಾಹನ ಚಾಲನೆ, ಮೊಬೈಲ್ ಪೋನ್ ಬಳಕೆ, ಅತಿವೇಗದ ಚಾಲನೆ ನಿಲ್ಲಬೇಕು. ಇದರಿಂದ ಅನೇಕ ಸಾವು ನೋವುಗಳು ಸಂಭವಿಸುತ್ತಿವೆ’ ಎಂದು ತಿಳಿಸಿದರು.
‘ಪ್ರಸ್ತುತ ದಿನಮಾನಗಳಲ್ಲಿ ಯುವಕರು, ಚಿಕ್ಕಮಕ್ಕಳು ಅತ್ಯಂತ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿ ಸಂಚಾರ ನಿಯಮ ಉಲ್ಲಂಘಿಸುತ್ತಿದ್ದಾರೆ. ನಿಯಮಗಳು ಇರುವುದು ನಮ್ಮ ಒಳ್ಳೆಯದಕ್ಕಾಗಿ ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲಿಸಬೇಕು’ ಎಂದು ಹೆಳಿದರು.
ಕೃಷ್ಣ ತುಂಗೆ ರೋಟರಿ ಕ್ಲಬ್ ಅಧ್ಯಕ್ಷ ಪವನಕುಮಾರ ಕಿಶೋರ ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿದರು.
ನ್ಯಾಯಾಧೀಶರಾದ ಜಿ.ಡಿ.ಮಹಾವರಕರ್, ಪ್ರಭು ಹತ್ತಿಕಾಳ್, ಸಿದ್ದರಾಮಪ್ಪ ಕಲ್ಯಾಣರಾವ್, ಸುಧೀನ್ ಕುಮಾರ ಡಿ.ಜೆ.,ಶ್ವೇತಾ ಸಿಂಗ್, ಎಚ್.ಎ.ಸಾತ್ವಿಕ್, ಕೃಪಾ ಸಿ.ಎಲ್., ಚನ್ನಬಸಪ್ಪ ಆರ್.ಕೂಡಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಗುರುನಾಥ ರೆಡ್ಡಿ, ವಕೀಲರಾದ ಶಿವಶಂಕರ, ಕೃಷ್ಣ ತುಂಗೆ ರೋಟರಿ ಕ್ಲಬ್ನ ಸದಸ್ಯರಾದ ಸಂಪತ್ ಕುಮಾರ್, ತಿರುಮಲ್ಲ ರೆಡ್ಡಿ, ಕೇಶರಾವ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.