
ದೇವದುರ್ಗ: ‘ರಾಜ್ಯ ಸರ್ಕಾರ ಕೊಟ್ಟ ಮಾತು ತಪ್ಪಿದೆ. ಸಮಾಜದ ಅಭಿವೃದ್ಧಿಗೆ ಹೋರಾಟ ಅನಿವಾರ್ಯ’ ಎಂದು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದರು.
ಪಟ್ಟಣದ ಬಿ.ಎಚ್. ಕಲ್ಯಾಣ ಮಂಟಪದಲ್ಲಿ ಈಡಿಗ ಬಿಲ್ಲವ, ನಾಮಧಾರಿ, ಧೀವರ, ತೀಯ ಸೇರಿದಂತೆ 26 ಪಂಗಡಗಳನ್ನು ಹೊಂದಿರುವ ಸಮಾಜದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲಬುರಗಿ ಜಿಲ್ಲೆ ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಶಕ್ತಿಪೀಠದಿಂದ ಬೆಂಗಳೂರಿನವರೆಗೆ ಹಮ್ಮಿಕೊಂಡಿದ್ದ 700 ಕಿಮೀ ಪಾದಯಾತ್ರೆ ದೇವದುರ್ಗ ಪ್ರವೇಶಿಸಿ ಸಮುದಾಯ ಜನರನ್ನು ಉದ್ಧೇಶಿಸಿ ಅವರು ಮಾತನಾಡಿರು.
‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ವರ್ಷಕ್ಕೆ ₹250 ಕೋಟಿ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿದ್ದರೂ ಅವರಿಗೆ ನೇಮಕಾತಿ ಆದೇಶ ನೀಡಿಲ್ಲ. ನಿಗಮಕ್ಕೆ ಅನುದಾನವನ್ನೂ ನೀಡಿಲ್ಲ. ನಿಗಮಕ್ಕೆ ವರ್ಷಕ್ಕೆ ₹500 ಕೋಟಿ ಬಿಡುಗಡೆ ಮಾಡಬೇಕು. ಬೆಂಗಳೂರಿನ ವಿಧಾನಸೌಧದ ಎದುರು ನಾರಾಯಣಗುರುಗಳ ಪ್ರತಮೆ ಸ್ಥಾಪಿಸಬೇಕು ಎಂಬುದು ಸೇರಿದಂತೆ 18 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ನಾರಾಯಣಗುರು ಪ್ರತಿಮೆ ಹೊತ್ತ ಸಾರೋಟದೊಂದಿಗೆ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯು ದೇವದುರ್ಗ ಪಟ್ಟಣ ಪ್ರವೇಶಿಸಿ ಇಂದು ತಾಲ್ಲೂಕಿನ ಸಿರವಾರ ಕ್ರಾಸ್ ಬಳಿ ವಾಸ್ತವ್ಯ ಇದ್ದು, ಮಂಗಳವಾರ ಅರಕೇರಾ ತಾಲ್ಲೂಕಿನ ಜುಟ್ಟು ಮರಡಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಈಡಿಗ ಸಮಾಜದ ಯುವ ಘಟಕದ ಅಧ್ಯಕ್ಷ ಚನ್ನಬಸವ ನಾಗೋಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.