
ರಾಯಚೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಗೊಂದಲ ಮುಂದುವರಿದಿರುವ ಹಿನ್ನೆಲೆ, ಸರ್ಕಾರದಿಂದ ಅಧಿಕೃತ ಆದೇಶ ಹೊರಬರುವವರೆಗೂ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ರೀತಿಯ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬಾರದು ಎಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.
ಸರ್ಕಾರ ಆತುರದಲ್ಲಿ ಒಳ ಮೀಸಲಾತಿ ಜಾರಿ ಮಾಡಿದೆ. ಇದರಿಂದ ಅಲೆಮಾರಿ ಜನಾಂಗಗಳು, ಎಕೆ, ಎಡಿ, ಎಎ ಸೇರಿದಂತೆ ಹಲವು ಜಾತಿಗಳಿಗೆ ಅನ್ಯಾಯವಾಗಿದ್ದು, ಬ್ಯಾಕ್ಲಾಗ್ ಉದ್ಯೋಗಗಳಲ್ಲಿ 101ಕ್ಕೂ ಹೆಚ್ಚು ಸಮುದಾಯಗಳು ವಂಚನೆಗೆ ಒಳಗಾಗಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಒಳ ಮೀಸಲಾತಿ ವರದಿ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸ್ಪಷ್ಟತೆ ಸಿಗುವವರೆಗೆ ಮತ್ತು ಸರ್ಕಾರದಿಂದ ಪೂರ್ಣ ಪ್ರಮಾಣದ ಅಧಿಕೃತ ಆದೇಶ ಹೊರಬರುವವರೆಗೆ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಯಾವುದೇ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ದುಳ್ಳಯ್ಯ ಗುಂಜಹಳ್ಳಿ, ಭೀಮೇಶ ತುಂಟಾಪೂರು, ಸುರೇಶ ದುಗನೂರ, ನಜಕ್ರಪ್ಪ ಹಂಚಿನಾಳ, ರಂಜೀತ್ ದಂಡೋರ, ದಾವೀದ್ ಮರ್ಚೆಟ್ಟಾಳ, ಮಾರುತಿ ಮರ್ಚೆಟ್ಟಾಳ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.