
ರಾಯಚೂರು: ‘ಸಾಹಿತ್ಯ ಅಧ್ಯಯನದಿಂದ ಆತ್ಮವಿಶ್ವಾಸ ಸದೃಢಗೊಳ್ಳುತ್ತದೆ. ವಿದ್ಯಾರ್ಥಿಗಳು ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ. ಹನುಮಂತಪ್ಪ ಸಲಹೆ ನೀಡಿದರು.
ಇಲ್ಲಿಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ. ಕನ್ನಡ ಸಂಘ, ಕೃಷಿ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಕನ್ನಡ ಸಂಘ, ಕೃಷಿ ಮಹಾವಿದ್ಯಾಲಯದ ಸಹಯೋಗದೊಂದಿಗೆ ಆಯೋಜಿಸಿದ್ದ ‘ಪರಿಷತ್ತಿನ ನಡೆ, ಯುವಕರ ಕಡೆ - ಪ್ರಚಾರೋಪನ್ಯಾಸ ಮಾಲೆ ಹಾಗೂ ಕ.ಸಾ.ಪ. ಆಜೀವ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
‘ಕನ್ನಡ ಸಾಹಿತ್ಯ ಪರಿಷತ್ತು ಯುವ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸುತ್ತಿರುವುದು ಸ್ವಾಗತಾರ್ಹ. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು‘ ಎಂದು ಹೇಳಿದರು.
ನಿವೃತ್ತ ಪ್ರಾಚಾರ್ಯ ಪರಮೇಶ್ವರ ಸಾಲಿಮಠ ಮಾತನಾಡಿ, ‘ಪಂಪ ರನ್ನ ಕವಿಗಳ ಸಾಹಿತ್ಯ ಗ್ರಂಥಗಳು ಬದುಕಿನ ಮೌಲ್ಯಗಳನ್ನು ಬೋಧಿಸುತ್ತವೆ. ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಸಾಹಿತ್ಯದ ಪ್ರಕಾರಗಳಾದ ಕಥೆ ಕಾದಂಬರಿ ನಾಟಕ ನವ್ಯ ನವೋದಯ ದಲಿತ ಬಂಡಾಯ ಹೊಸಗನ್ನಡದ ಸಾಹಿತ್ಯ ಪ್ರಕಾರಗಳನ್ನು ಆಸಕ್ತಿಯಿಂದ ಓದಬೇಕು‘ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ವಿಜಯ ರಾಜೇಂದ್ರ ವಹಿಸಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕನ್ನಡ ಸಂಘದ ಅಧ್ಯಕ್ಷ ಗುರುರಾಜ ಸುಂಕದ, , ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಎಂ. ಎಸ್. ಅಯ್ಯನಗೌಡರ, ಕೃಷಿ ಮಹಾವಿದ್ಯಾಲಯದ ಕೆ.ನಾರಾಯಣರಾವ್, ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಮುಖ್ಯ ಶಿಕ್ಷಕ ಸಲಹೆಗಾರ ಮಹೇಶ್ವರ ಬಾಬು, ವಿಶ್ವನಾಥ ಎಸ್., ವಿಜಯಕುಮಾರ ಪಲ್ಲೇದ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಗ ಶರಣಪ್ಪ ಚಲುವಾದಿ ಉಪಸ್ಥಿತರಿದ್ದರು.
ಲಕ್ಷ್ಮಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ವಿಜಯಕುಮಾರ ಪಲ್ಲೇದ ಸ್ವಾಗತಿಸಿದರು. ಪ್ರೊ. ಟಿ. ಸಿ. ಸುಮಾ ನಿರೂಪಿಸಿದರು. ಶರಣಪ್ಪ ಚಲುವಾದಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.