ADVERTISEMENT

ಎಲ್ಲಕ್ಕೂ ಸಂವಿಧಾನವೇ ತಳಹದಿ

ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಶಂಕರ್ ಬಿ.ಪಾಟೀಲ ಭಾಷಣ 

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 11:48 IST
Last Updated 26 ಜನವರಿ 2022, 11:48 IST
ರಾಯಚೂರು ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ನೂತನ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬಿ.ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು
ರಾಯಚೂರು ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ನೂತನ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬಿ.ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು   

ರಾಯಚೂರು: ದೇಶದ ಏಕತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯು ನೀಡಿರುವ ಕಾಣಿಕೆಯನ್ನು ಮರೆಯುವಂತಿಲ್ಲ. ಎಲ್ಲದಕ್ಕೂ ಸಂವಿಧಾನವೇ ತಳಹದಿಯಾಗಿದೆ. ಈ ಸಂವಿಧಾನವನ್ನು ರಚಿಸಿರುವ ಇತಿಹಾಸ ಕೂಡ ವಿಶೇಷತೆಗಳಿಂದ ಕೂಡಿದೆ ಎಂದು ನೂತನ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬಿ.ಪಾಟೀಲ ಹೇಳಿದರು.

ನಗರದ ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಜಿಲ್ಲಾಡಳಿತದಿಂದ ಬುಧವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜರೋಹಣ ನೆರವೇರಿಸಿ ಮಾತನಾಡಿದರು.

ದೇಶವು 1947ರಲ್ಲಿ ದಾಸ್ಯದ ಸಂಕೋಲೆಯನ್ನು ಕಳಚಿಕೊಂಡಿತು. ಆ ನಂತರ 1950 ಜನವರಿ 26ರಂದು ಸಂವಿಧಾನವನ್ನು ಅಧಿಕೃತವಾಗಿ ಜಾರಿಗೊಳಿಸಲಾಯಿತು. ಇಡೀ ವಿಶ್ವದಲ್ಲಿ ಭಾರತ ಕೂಡಾ ಒಂದು ಸಾರ್ವಭೌಮ ರಾಷ್ಟ್ರವಾಯಿತು. ಇದರ ನೆನಪಿಗೆ ಗಣರಾಜ್ಯೋತ್ಸವವನ್ನು ಆಚರಿಸುತ್ತಾ ಬಂದಿದ್ದೇವೆ ಎಂದರು.

ADVERTISEMENT


ಜಗತ್ತಿನಲ್ಲಿ ಜಾರಿಯಲ್ಲಿರುವ ರಾಜಕೀಯ ವ್ಯವಸ್ಥೆಗಳ ಪೈಕಿ ಭಾರತದಂತಹ ದೇಶಕ್ಕೆ ಪ್ರಜಾಸತ್ತೆಯೇ ಸೂಕ್ತ ಎಂದು ನಮ್ಮ ಹಿರಿಯರು ಅಂದು ನಿರ್ಧರಿಸಿದ ಫಲವಾಗಿ ನಾವೆಲ್ಲರೂ ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡಿದ್ದೇವೆ. ಸಂವಿಧಾನ ಕರಡು ಸಮಿತಿಯಲ್ಲಿ ಮತ್ತು ರಚನಾ ಸಭೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪಾತ್ರ ವಿಶೇಷವಾಗಿತ್ತು. ಅವರ ಅನುಭವದ ನೆರವಿನಿಂದ ಸಂವಿಧಾನ ರಚನೆಗೆ ನೀಡಿದ ಕೊಡುಗೆಯಿಂದಾಗಿ ಅವರನ್ನು 'ಸಂವಿಧಾನದ ಪಿತಾಮಹ' ಎಂದು ಸ್ಮರಿಸುತ್ತೇವೆ ಎಂದು ಹೇಳಿದರು.


ಹಿಂದುಳಿದ ಜಿಲ್ಲೆಗಳನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಕೇಂದ್ರಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯಡಿ ರಾಯಚೂರು ಜಿಲ್ಲೆ ಆಯ್ಕೆಯಾಗಿರುವುದು ಸಂತೋಷದ ಸಂಗತಿ. ಉತ್ತಮ ಆರೋಗ್ಯ, ಶಿಕ್ಷಣ, ಕೃಷಿ, ಆರ್ಥಿಕಸೌಕರ್ಯ ಒದಗಿಸುವುದು, ಕೌಶಾಲ್ಯಾಭಿವೃದ್ಧಿಗೆ ಆದ್ಯತೆ, ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವುದು ಈ ಯೋಜನೆಯ ಉದ್ದೇಶ ಎಂದು ತಿಳಿಸಿದರು.


ರಾಯಚೂರು ವಿಮಾನ ನಿಲ್ದಾಣವು ಈಗ ನನಸಾಗುವ ಹಂತಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದ ವಿಸ್ತ್ರತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‌ ಮೂರನ್ನು ಅಲೆ ನಿಯಂತ್ರಿಸಲು ಜಿಲ್ಲಾಡಳಿತ ಮತ್ತು ಹಗಲಿರುಳು ಶ್ರಮಿಸುತ್ತಿದೆ ಎಂದು ಹೇಳಿದರು.

ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ, ಆರೋಗ್ಯ, ಪಂಚಾಯತ್ ರಾಜ್, ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಮಟ್ಟದಲ್ಲಿ ಶ್ರಮಿಸಿದ ವ್ಯಾಕ್ಸಿನೇಟರಗಳು, ಆಶಾ ಕಾರ್ಯಕ್ರಯರು, ಅಂಗನವಾಡಿ ಕಾರ್ಯಕ್ರ ಗ್ರಾಮ ಲೆಕ್ಕಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಿಕ್ಷಕರ ಪರಿಶ್ರಮದಿಂದ ಕೋವಿಡ್ ನಿಯಂತ್ರಣ ಕ್ರಮಗಳ ಜಾರಿ ಸಾಧ್ಯವಾಗಿದೆ ಎಂದು ತಿಳಿಸಿದರು.

ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಬಸನಗೌಡ ದದ್ದಲ, ಡಾ.ಶಿವರಾಜ ಪಾಟೀಲ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್‌.ದುರುಗೇಶ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹಾರಾ ಖಾನಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.