ಸಿರವಾರ: ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಕೆಸರು ಗದ್ದೆಗಳಾಗಿ ಮಾರ್ಪಟ್ಟಿವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿಡಿದುಕೊಂಡು ಪ್ರಯಾಣಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಪಟ್ಟಣದಿಂದ ಮರಾಟ, ಮುರ್ಕಿಗುಡ್ಡ ಸೇರಿದಂತೆ ಹಳ್ಳಿ ಮತ್ತು ತಾಂಡಾಗಳ ರಸ್ತೆಗಳಲ್ಲಿ ನೀರು ನಿಂತುಕೊಂಡ ಕಾರಣ ಅದನ್ನು ದಾಟಲು ಪರದಾಡಬೇಕಾದ ಸ್ಥಿತಿ ಇದೆ.
ಶಾಲೆಗಳು ಆರಂಭವಾಗಿರುವುದರಿಂದ ಪಟ್ಟಣದ ಶಾಲಾ–ಕಾಲೇಜುಗಳಿಗೆ ವಿದ್ಯಾರ್ಥಿಗಳು ನಡೆದುಕೊಂಡು, ದ್ವಿಚಕ್ರ ವಾಹನ ಅಥವಾ ಆಟೊಗಳಲ್ಲಿ ಬರಬೇಕಾದ ಅನಿವಾರ್ಯತೆ ಎದುರಾಗಿದೆ.
‘ಮಳೆಗಾಲ ಬಂತೆಂದರೆ ಸಾಕು ಪ್ರತಿವರ್ಷ ರಸ್ತೆಗಳ ಸ್ಥಿತಿ ಇದೇ ರೀತಿಯಾಗಿರುತ್ತದೆ. ಮಳೆಗಾಲ ಮುಗಿಯುವುದರೊಳಗೆ ಅಲ್ಪಸ್ವಲ್ಪ ಮರಂ, ಕಂಕರ್ ಹಾಕಿ ರಸ್ತೆ ದುರಸ್ತಿ ನೆಪದಲ್ಲಿ ಹಣ ಲೂಟಿ ಮಾಡಲಾಗುತ್ತದೆ. ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದಿಲ್ಲ’ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.
ಸಾಂಕ್ರಾಮಿಕ ರೋಗ ಭೀತಿ: ರಸ್ತೆಯಲ್ಲಿ ಮಳೆ ನೀರು ಸಂಗ್ರಹವಾಗುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ.
ರಸ್ತೆ ಪಕ್ಕದಲ್ಲಿ ಬೇಲಿ: ರಸ್ತೆ ಪಕ್ಕದಲ್ಲಿ ಜಾಲಿ ಗಿಡಗಳು ಬೆಳೆದು ರಸ್ತೆಗೆ ಬೇಲಿ ಹಾಕಿದಂತಾಗಿದೆ. ರಸ್ತೆಯಲ್ಲಿ ನೀರು, ಪಕ್ಕದಲ್ಲಿ ಜಾಲಿ ಗಿಡಗಳಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ.
‘ಅಧಿಕಾರಿಗಳ ನಿರ್ಲಕ್ಷ್ಯ’: ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹೆಚ್ಚು ಎಂದರೆ ತಾಲ್ಲೂಕು ಕೇಂದ್ರಗಳಿಗೆ ಬಂದು ಹೋಗುತ್ತಾರೆ. ಗ್ರಾಮೀಣ ಪ್ರದೇಶಗಳ ಕಡೆ ಬಂದರೆ ಮಾತ್ರ ಇಲ್ಲಿನ ರಸ್ತೆಗಳ ಪರಿಸ್ಥಿತಿ ತಿಳಿಯುತ್ತದೆ. ಇದರ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸ್ಪಂದಿಸದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ರಸ್ತೆ ಸಮಸ್ಯೆ ಬಗ್ಗೆ ಪ್ರತಿ ಬಾರಿಯೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲದೇವಣ್ಣ ನಾಯಕ ನವಲಕಲ್ಲು
ರಸ್ತೆ ದುರಸ್ತಿ ಮಾಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆದುರುಗಮ್ಮ ಮಲ್ಲಪ್ಪ ಗ್ರಾ.ಪಂ ಅಧ್ಯಕ್ಷೆ ನವಲಕಲ್ಲು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.