ADVERTISEMENT

ಅರಕೇರಾ: ಬಡವರಿಗೆ ಸಾಮೂಹಿಕ ವಿವಾಹ ವರದಾನ-ಸತೀಶ ಜಾರಕಿಹೊಳಿ

ವೆಂಕಟೇಶ ನಾಯಕ ಜನ್ಮದಿನಾಚರಣೆ ಪ್ರಯುಕ್ತ ಕಾರ್ಯಕ್ರಮ: ಸತೀಶ ಜಾರಕಿಹೊಳಿ ಅಭಿಮತ

​ಪ್ರಜಾವಾಣಿ ವಾರ್ತೆ
Published 29 ಜೂನ್ 2022, 4:07 IST
Last Updated 29 ಜೂನ್ 2022, 4:07 IST
ದೇವದುರ್ಗ ತಾಲ್ಲೂಕಿನ ಅರಕೇರಾ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿದರು
ದೇವದುರ್ಗ ತಾಲ್ಲೂಕಿನ ಅರಕೇರಾ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿದರು   

ಅರಕೇರಾ (ದೇವದುರ್ಗ): ‘ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ. ಅವುಗಳು ಸರ್ವರೂ ಸಮಾನರು ಎಂಬುದನ್ನು ತೋರಿಸುತ್ತವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಮಾಜಿ ಸಂಸದ ವೆಂಕಟೇಶ ನಾಯಕ ಜನ್ಮದಿನಾಚರಣೆ ಅಂಗವಾಗಿ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ ರಾಜಕಾರಣಿಗಳು ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಬಡ ಕುಟುಂಬಗಳಿಗೆ ನೆರವಾಗಬೇಕು’ ಎಂದು ಸಲಹೆ ನೀಡಿದರು.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ಮುಂದೆ ತಮ್ಮ ಮಕ್ಕಳಿಗೆ ಲೇಖನಿ ನೀಡಿ ಅಂಬೇಡ್ಕರ್ ಅವರ ಜ್ಞಾನ, ಬಸವಣ್ಣನವರ ವಚನ ಬೋಧಿಸಬೇಕು. ಬುದ್ಧನ ಆದರ್ಶಗಳ ಕುರಿತು ತಿಳಿಸಬೇಕು. ಕಲ್ಯಾಣ ಕ್ರಾಂತಿಯ ಮೂಲಕ ನವ ಸಮಾಜ ನಿರ್ಮಾಣಕ್ಕೆ ಬಸವೇಶ್ವರರು ಅಡಿಪಾಯ ಹಾಕಿದರು. ಎಲ್ಲರನ್ನೂ ಒಳಗೊಂಡ ಬಸವತತ್ವ ಹಾಗೂ ಶರಣ ತತ್ವ ಅನುಸರಿಸಲು ಪ್ರೇರೇಪಿಸಬೇಕು ಎಂದು ತಿಳಿಸಿದರು.

ADVERTISEMENT

ಕಾಂಗ್ರೆಸ್ ಪಕ್ಷದ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ವಿ.ನಾಯಕ ಮಾತನಾಡಿ,‘ಸಿರಿವಂತರು, ಬಡವರ ನೆರವಿಗೆ ಧಾವಿಸಿದಾಗ ಜೀವನ ಸಾರ್ಥಕವಾಗುತ್ತದೆ. ತಂದೆ-ತಾಯಿ, ಗುರು ಹಾಗೂ ಸಮಾಜದ ಋಣ ತೀರಿಸಿದಾಗ ಬದುಕಿಗೆ ಅರ್ಥ ಬರುತ್ತದೆ. ದುಡಿದು ಗಳಿಸಿದ ಸಂಪತ್ತಿನಲ್ಲಿ ಇಲ್ಲದವರಿಗೆ ದಾನ ಮಾಡಬೇಕು’ ಎಂದರು.

78 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು. 2 ಜೋಡಿ ಅಂತರ್ಜಾತಿ ವಿವಾಹವಾಗುವ ಮೂಲಕ ಗಮನಸೆಳೆದವು.

ಎಐಸಿಸಿ ಕಾರ್ಯದರ್ಶಿ ಬೋಸರಾಜು, ಲಿಂಗಸುಗೂರು ಶಾಸಕ ಡಿ.ಎಸ್.ಹೂಲಗೇರಿ, ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜಶೇಖರ ನಾಯಕ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಾಜಿ ಶಾಸಕ ಸೈಯದ್ ಯಾಸಿನ್, ಎ.ವಸಂತಕುಮಾರ, ಪುರಸಭೆ ಅಧ್ಯಕ್ಷ ಶರಣಗೌಡ ಬಕ್ರಿ ಗೌರಂಪೇಟ ಮತ್ತು ತಾಲ್ಲೂಕು ಹಾಗೂ ಜಿಲ್ಲೆಯ ವಿವಿಧ ಮಠಾಧೀಶರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.